ಚೆನ್ನೈ: ‘ಒಂದು ಉತ್ತಮ ಕಾರ್ಯ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ’ ಎಂದು ನಟ ಹಾಗೂ ರಾಜಕಾರಣಿ ಕಮಲ್ಹಾಸನ್ ಹೇಳಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಗ್ಗೆ ಕೆಲವು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ತಮ್ಮ ಭೇಟಿಯನ್ನು ಈ ರೀತಿ ಸಮರ್ಥಿಸಿಕೊಂಡಿದ್ದಾರೆ.
ರೈತ ಸಂಘಟನೆಗಳ ಮುಖಂಡರೊಂದಿಗೆ ಬುಧವಾರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಕಾರಣಿಗಳನ್ನು ಹೊರಗಿಟ್ಟು, ಕರ್ನಾಟಕ ಮತ್ತು ತಮಿಳುನಾಡು ರೈತರು ಪರಸ್ಪರ ಮಾತುಕತೆ ಮೂಲಕ ಈ ವಿವಾದ ಬಗೆಹರಿಸಿಕೊಳ್ಳಬೇಕು’ ಎಂದು ಪ್ರತಿಪಾದಿಸಿದರು.