ಹುಬ್ಬಳ್ಳಿ: ಹಾವೇರಿ, ಬೆಳಗಾವಿ, ವಿಜಯಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಬುಧವಾರ ಮಳೆಯಾಗಿದೆ.
ವಿಜಯಪುರ ಜಿಲ್ಲೆ ತಾಳಿಕೋಟೆ, ಕೊಣ್ಣೂರು ಸುತ್ತಮುತ್ತ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಶಿರಸಿ ಮತ್ತು ಬನವಾಸಿಯಲ್ಲಿ ಒಂದು ತಾಸು ಧಾರಾಕಾರ ಮಳೆಯಾಗಿದೆ.
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ, ಬ್ಯಾಡಗಿಯಲ್ಲಿ ಹಾಗೂ ಬೆಳಗಾವಿ ಜಿಲ್ಲೆಯ ಹಲವೆಡೆ ತುಂತುರು ಮಳೆಯಾಗಿದೆ. ಖಾನಾಪುರ ಹಾಗೂ ಯಮಕನಮರಡಿಯಲ್ಲಿ ಗುಡುಗು, ಮಿಂಚು ಸಮೇತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರದಿಂದಾಗಿ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು.
ಗುಡುಗು ಸಹಿತ ಮಳೆ: ಶಿವಮೊಗ್ಗ ಜಿಲ್ಲೆಯ ಹಲವೆಡೆ ಬುಧವಾರ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಶಿಕಾರಿಪುರ, ಸಾಗರ, ಹೊಸನಗರ, ತೀರ್ಥಹಳ್ಳಿ, ಸೊರಬ, ಭದ್ರಾವತಿ, ಕೋಣಂದೂರಿನಲ್ಲಿ ಉತ್ತಮ ಮಳೆಯಾಗಿದೆ. ಶಿವಮೊಗ್ಗ ನಗರದಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗಿದೆ.
ಗುಡುಗು ಸಹಿತ ಮಳೆಗೆ ಅನೇಕ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಿತ್ತು.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಲ್ಲಿ ಬುಧವಾರ ಸಿಡಿಲು ಸಹಿತ ಮಳೆಯಾಗಿದೆ.