ಬೆಂಗಳೂರು: ಮಲೆನಾಡಿನಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಕಳಸ, ಶೃಂಗೇರಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಚಾರ್ಮಾಡಿ ಘಾಟಿ ಮಾರ್ಗ, ಗಿರಿಶ್ರೇಣಿ, ಇತರೆಡೆಗಳ ಜಲಪಾತ, ಹಳ್ಳಕೊಳ್ಳಗಳು ಮೈದುಂಬಿಕೊಳ್ಳುತ್ತಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ವಿಟ್ಲ, ಬಂಟ್ವಾಳದಲ್ಲಿ ಉತ್ತಮ ಮಳೆಯಾಗಿದೆ.ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ಸಾಧಾರಣ ಮಳೆಯಾಗಿದೆ. ಕಾಪು ತಾಲ್ಲೂಕಿನಲ್ಲಿ ಕಡಲ್ಕೊರೆತ ಶುರುವಾಗಿದೆ. ಗಾಳಿ– ಮಳೆಗೆ ಸಮುದ್ರ ಪ್ರಕ್ಷುಬ್ಧಗೊಂಡಿದ್ದು,
ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಎರ್ಮಾಳು, ತೆಂಕ, ನಡಿಪಟ್ಣ, ಕಾಡಿಪಟ್ಣ ಹಾಗೂ ಪಡುಬಿದ್ರಿಯಲ್ಲಿ ಕಡಲ್ಕೊರೆತ ಉಂಟಾಗಿದೆ.
ಸಾಧಾರಣ ಮಳೆ:ದಾವಣಗೆರೆ ನಗರ ಸೇರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿದೆ.ಶಿವಮೊಗ್ಗ, ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಸುಂಟಿಕೊಪ್ಪದಲ್ಲಿ ಧಾರಾಕಾರ ಮಳೆಯಾಯಿತು. ಹಾಸನ ನಗರದ ಸುತ್ತಮುತ್ತ ಹಾಗೂ ಸಕಲೇಶಪುರದಲ್ಲಿ ತುಂತುರು ಮಳೆಯಾಗಿದೆ.
ಕಲಬುರ್ಗಿ ನಗರ ಸೇರಿ ಜಿಲ್ಲೆಯ ಕಮಲಾಪುರ ಮತ್ತು ಚಿತ್ತಾಪುರ ತಾಲ್ಲೂಕಿನ ಕೆಲ ಕಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಕಾರವಾರ, ಅಂಕೋಲಾ, ಕುಮಟಾ ಭಾಗದಲ್ಲಿ ಬೆಳಿಗ್ಗೆ ಸಾಧಾರಣ ಮಳೆಯಾಯಿತು.ಬೆಳಗಾವಿ ಜಿಲ್ಲೆಯ ವಿವಿಧೆಡೆ ಜಿಟಿಜಿಟಿ ಮಳೆಯಾಯಿತು.ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧಾರಣ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.