ಬೆಳಗಾವಿ: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನದಿ ದಂಡೆಯ ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿಕೊಂಡಿದ್ದಾರೆ.
ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ನದಿಗೆ ಮಂಗಳವಾರ ಬೆಳಿಗ್ಗೆ 8 ಗಂಟೆಯವರೆಗೆ 3 ಲಕ್ಷ ಕ್ಯುಸೆಕ್ ನೀರು ಹರಿಬಿಡಲಾಗಿದೆ. ಇದು 4 ಲಕ್ಷ ಕ್ಯುಸೆಕ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹಿಡಕಲ್ ಜಲಾಶಯ ಕೂಡ ಭರ್ತಿಯಾಗಿದ್ದು, ಒಂದು ಲಕ್ಷ ಕ್ಯೂಸೆಕ್ ಇಳಹರಿವು ಇದೆ. ಅದೇ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗುತ್ತಿದೆ.
ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದ ಜನರು ಆದಷ್ಟು ಬೇಗನೇ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಸೇನೆ, ಪೊಲೀಸ್, ಅಗ್ನಿಶಾಮಕ ದಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಅನೇಕ ತಂಡಗಳು ಜನರು ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇವರ ಸಹಾಯ ಪಡೆಯಬೇಕು ಎಂದು ಅವರು ಕೋರಿದ್ದಾರೆ.
ಜಲಾವೃತಗೊಂಡಿರುವ ಗ್ರಾಮಗಳಲ್ಲಿ ಉಳಿದುಕೊಂಡಿರುವ ಜನ ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕೆಲಸ ನಿರಂತರವಾಗಿ ನಡೆದಿದೆ. ಆದಾಗ್ಯೂ ಯಾರಾದರೂ ಅಪಾಯದಲ್ಲಿ ಸಿಲುಕಿದ್ದರೆ ತಕ್ಷಣವೇ ಜಿಲ್ಲಾಧಿಕಾರಿ ಕಾರ್ಯಾಲಯ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಹಾಗೂ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿರುವ ಈ ಕೆಳಕಂಡ ಸಹಾಯ ವಾಣಿ ಕೇಂದ್ರಗಳಿಗೆ ಮಾಹಿತಿ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
2005-06 ನೇ ಸಾಲಿನಲ್ಲಿ ಎದುರಾಗಿದ್ದ ಪ್ರವಾಹ ಪರಿಸ್ಥಿತಿ ಪುನಾರವರ್ತನೆಯಾಗುವ ಸಾಧ್ಯತೆಗಳಿರುವುದರಿಂದ ನದಿಪಾತ್ರದ ಜನರು ಗರಿಷ್ಠ ಮಟ್ಟದ ಎಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ಹರಿಯುತ್ತಿರುವ ನೀರಿನಲ್ಲಿ ಈಜಲು ಅಥವಾ ದಾಟಲು ಪ್ರಯತ್ನಿಸಬಾರದು. ಅಂತಹ ಸಂದರ್ಭಗಳಲ್ಲಿ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಿದರೆ ಕೂಡಲೇ ರಕ್ಷಣಾ ತಂಡಗಳನ್ನು ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಹಾಯವಾಣಿ/ನಿಯಂತ್ರಣ ಕೊಠಡಿ ಸಂಖ್ಯೆ: ಜಿಲ್ಲಾಧಿಕಾರಿ ಕಚೇರಿ- 0831-2407290; ಪೊಲೀಸ್ ವರಿಷ್ಠಾಧಿಕಾರಿ ಕಚೇರಿ-0831-2405231; ಚಿಕ್ಕೋಡಿ-08338-272228; ರಾಯಬಾಗ: 08331-225482; ಅಥಣಿ: 08289-251146; ನಿಪ್ಪಾಣಿ: 08338-220395
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.