ಬೆಂಗಳೂರು: ‘ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದು, ಹುಡುಕಿಕೊಡಬೇಕು’ ಎಂದು ಕೋರಿ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಶಾಸಕ ರಮೇಶ್ ಜಾರಕಿಹೊಳಿ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಈ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
‘ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಅವರನ್ನು ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅಕ್ರಮ ಬಂಧನದಲ್ಲಿ ಇಟ್ಟುಕೊಂಡಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚಿ ಕೋರ್ಟ್ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.
ಬೆಳಗಾವಿ ಜಿಲ್ಲೆ ಅಥಣಿಯ ವಕೀಲ ಹಾಗೂ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಮೋದ ದಯಾನಂದ ಹಿರೇಮನಿ ಈ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಅಥಣಿ ಪೊಲೀಸ್ ಠಾಣಾಧಿಕಾರಿ, ಶಾಸಕರಾದ ಮಹೇಶ್ ಈರನಗೌಡ ಕುಮಟಳ್ಳಿ ಹಾಗೂ ರಮೇಶ್ ಜಾರಕಿಹೊಳಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.