ಬೆಂಗಳೂರು: ‘ರಾಜ್ಯದ ಸರ್ಕಾರಿ ಹಾಸ್ಟೆಲ್ಗಳ ಮೂಲಸೌಕರ್ಯಗಳ ಬಗ್ಗೆ ಸಮೀಕ್ಷೆ ನಡೆಸುವಂತೆ ನೀಡಿದ ಸೂಚನೆ ಪಾಲಿಸದಿರುವ ಬಗ್ಗೆ ಏಕೆ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬಾರದು’ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ.
ಕೊಪ್ಪಳ ನಗರದ ಬನ್ನಿಕಟ್ಟಿ ಬಳಿಯ ಬಿಸಿಎಂ ಹಾಸ್ಟೆಲ್ನಲ್ಲಿ ವಿದ್ಯುತ್ ಅವಘಡ ಸಂಭವಿಸಿ ಐವರು ವಿದ್ಯಾರ್ಥಿಗಳು ಸಾವ ನ್ನಪ್ಪಿದ ಘಟನೆ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
‘ಕೋರ್ಟ್ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಈ ಕುರಿತಂತೆ ಒಂದು ವಾರದಲ್ಲಿ ಉತ್ತರಿಸುವಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಗೆ ನಿರ್ದೇಶಿಸಿದೆ.
ಈ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರ, ‘ರಾಜ್ಯದಾದ್ಯಂತ ಹಿಂದುಳಿದ ವರ್ಗಗಳ ಇಲಾಖೆ ಅಧೀನದಲ್ಲಿರುವ 2,438 ಹಾಸ್ಟೆಲ್ಗಳ ಪೈಕಿ 1,031 ಹಾಸ್ಟೆಲ್ಗಳು ಬಾಡಿಗೆ ಕಟ್ಟಡದಲ್ಲಿ ಇವೆ’ ಎಂದು ತಿಳಿಸಿತ್ತು.
ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಪೀಠ, ‘ಸರ್ಕಾರಿ ಹಾಸ್ಟೆಲ್ಗಳಲ್ಲಿನ ಮೂಲಸೌಕರ್ಯ ಹಾಗೂ ಅಲ್ಲಿನ ಸುರಕ್ಷತೆಯ ಬಗ್ಗೆ ಸಮೀಕ್ಷೆ ನಡೆಸಲು ಜಿಲ್ಲಾ ಮಟ್ಟದ ಸಮಿತಿ ರಚಿಸಬೇಕು’ ಎಂದು ಆದೇಶಿಸಿತ್ತು.