ಲಖನೌ: ಗಣರಾಜ್ಯೋತ್ಸವದಂದು ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ನಡೆದಿದ್ದ ಹಿಂಸಾಚಾರವನ್ನು ಅಲ್ಲಿನ ಸಚಿವರೊಬ್ಬರು ‘ಸಣ್ಣ ಘಟನೆ’ ಎಂದು ಹೇಳಿದ್ದಾರೆ.
ಗಲಭೆಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಖಾದಿ ಮತ್ತು ಜವಳಿ ಸಚಿವ ಸತ್ಯದೇವ್ ಪಚೌರಿ, ‘ಅಂಥ ಸಣ್ಣ ಘಟನೆಗಳು ಎಲ್ಲೆಡೆ ನಡೆಯುತ್ತಿರುತ್ತವೆ. ಅದಕ್ಕೆ ಹೆಚ್ಚಿನ ಮಹತ್ವ ಕೊಡಬೇಕಿಲ್ಲ’ ಎಂದು ಹೇಳಿದ್ದಾರೆ.
ಪರಿಸ್ಥಿತಿ ಹದಗೆಡುವ ಮುನ್ನವೇ ಕಾನೂನು ಉಲ್ಲಂಘಿಸುವವರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಅಲ್ಲದೆ, ಗಲಭೆಗೆ ಜಿಲ್ಲೆಯ ಅಧಿಕಾರಿಗಳನ್ನೇ ಹೊಣೆ ಮಾಡಿದ್ದಾರೆ. ಸಚಿವರ ಹೇಳಿಕೆಗೆ ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಸ್ಗಂಜ್ನಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ಯುವಕ ಚಂದನ್ ಗುಪ್ತಾ ಮೃತಪಟ್ಟು, ಹತ್ತಾರು ಜನ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 126 ಜನರನ್ನು ಬಂಧಿಸಲಾಗಿದೆ.