ಬೆಳಗಾವಿ: ‘ಸಂಪುಟ ವಿಸ್ತರಣೆ ಮಾಡುವುದು, ಬಿಡುವುದು ಮುಖ್ಯಮಂತ್ರಿಗಿರುವ ಪರಮಾಧಿಕಾರ. ವಿಸ್ತರಣೆಯೋ, ಪುನರ್ ರಚನೆಯೋ ನನಗೇನೂ ಗೊತ್ತಿಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನೊಬ್ಬ ಮಂತ್ರಿಯಷ್ಟೇ. ಮುಖ್ಯಮಂತ್ರಿ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ. ಯಾವಾಗ ಸಂಪುಟ ವಿಸ್ತರಣೆಯಾಗುತ್ತದೆಯೋ, ಯಾರನ್ನು ತೆಗೆದುಕೊಳ್ಳುತ್ತಾರೋ, ಯಾರನ್ನು ಬಿಡುತ್ತಾರೋ ತಿಳಿದಿಲ್ಲ’ ಎಂದರು.
‘ದಾವೂಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆವು. ದೊಡ್ಡ ಪ್ರಮಾಣದ ಪ್ರತಿಕ್ರಿಯೆ ಹಲವು ಕೈಗಾರಿಕೋದ್ಯಮಿಗಳಿಂದ ಸಿಕ್ಕಿದೆ. ಮೂರೇ ದಿನಗಳಲ್ಲಿ 40ಕ್ಕೂ ಹೆಚ್ಚಿನ ದೊಡ್ಡ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಿದೆವು. ಅವರು ಕರ್ನಾಟಕದಲ್ಲಿ ಹೂಡಿಕೆ ಮಾಡುವುದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಹೇಳಿದರು.
‘ಕೈಗಾರಿಕೆ ಸಲುವಾಗಿ ರೈತರಿಂದ ಭೂಮಿ ಖರೀದಿಗೆ ತಿಂಗಳಲ್ಲಿ ಒಪ್ಪಿಗೆ ನೀಡಲಾಗುವುದು. ಅಂತೆಯೇ 30 ದಿನಗಳೊಳಗೆ ಎನ್ಎ (ಕೃಷಿಯೇತರ ಭೂಮಿ) ಮಾಡಿಕೊಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಇದು ಕೈಗಾರಿಕೋದ್ಯಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಉತ್ತರ ಕರ್ನಾಟಕದಲ್ಲೂ ಕೈಗಾರಿಕೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.