ಬೆಳಗಾವಿ: ‘ಸಚಿವ ರಮೇಶ ಜಾರಕಿಹೊಳಿ ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇವೆ. ರಮೇಶ ಅವರು 10 ಜನ ಶಾಸಕರನ್ನು ಕರೆದುಕೊಂಡು ಬಂದರೆ ಬಿಜೆಪಿ ಸರ್ಕಾರ ರಚಿಸುತ್ತೇವೆ’ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಮೇಶ ಮಾನಸಿಕವಾಗಿ ಸರ್ಕಾರದಿಂದ ದೂರವಾಗಿ ಬಹಳ ದಿನಗಳಾಗಿರುವುದು ಎಲ್ಲರಿಗೂ ಗೊತ್ತಾಗಿರುವ ವಿಷಯ. ಅಧಿಕೃತವಾಗಿ ಘೋಷಣೆಯಾಗಬೇಕಷ್ಟೇ ಎಂದರು.
‘104 ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿರುವ ಬಿಜೆಪಿ ಸರ್ಕಾರ ರಚಿಸಬೇಕೆನ್ನುವುದು ರಾಜ್ಯದ ಜನರ ಆಶಯವಾಗಿದೆ. ಇದಕ್ಕೆ ಪೂರಕವಾಗಿ ರಮೇಶ ಬೆಂಬಲ ನೀಡುತ್ತಾರೆ ಎನ್ನುವುದು ನಮ್ಮ ನಿರೀಕ್ಷೆಯಾಗಿದೆ. ಬಿಜೆಪಿ ಬರಲಿ ಎನ್ನುವುದು ನಮ್ಮ ಆಶಯವಾಗಿದೆ’ ಎಂದು ಹೇಳಿದರು.
ಅಪರಾಧ:‘ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕರು ಬಂದಿದ್ದೆ ಅಪರಾಧ. ಏಕೆಂದರೆ ಇಲ್ಲಿ ಬಹಳ ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದವರಿಗೆ ನೋವಾಗುತ್ತದೆ. ಇದನ್ನೇ ರಮೇಶ ಕೂಡ ಹೇಳಿದ್ದಾರೆ’ ಎಂದು ಅವರು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಹೇಳಿದರು.