ಬೆಂಗಳೂರು: ‘ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ ಎಂದು ಕೋರಿ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ಗಾಲಿ ಜನಾರ್ದನ ರೆಡ್ಡಿ ಹಿಂಪಡೆದಿದ್ದಾರೆ.
ಈ ಕುರಿತ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರೆಡ್ಡಿ ಪರ ವಕೀಲರು ಅರ್ಜಿಗಳನ್ನು ಹಿಂಪಡೆಯುತ್ತಿರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಪೀಠ ಸಮ್ಮತಿಸಿತು. ಸಿಬಿಐ ಪರ ಪಿ.ಪ್ರಸನ್ನಕುಮಾರ್ ಹಾಜರಿದ್ದರು.
ಪ್ರಕರಣವೇನು?: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ ಹೆಗ್ಡೆ ಮತ್ತು ಸಿಇಸಿ (ಸೆಂಟ್ರಲ್ ಎಂಪವರ್ ಕಮಿಟಿ) ವರದಿ ಆಧರಿಸಿ ಈ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ತನಿಖೆ ನಡೆಸಿದ ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.