ಬೆಂಗಳೂರು: ಐಎಂಎ ಕಂಪನಿ ವಂಚನೆ ಪ್ರಕರಣ ಸಂಬಂಧ, ಕಂಪನಿಯ ಲೆಕ್ಕ ತಪಾಸಣೆ ಮಾಡಿದ್ದ ಇಕ್ಬಾಲ್ ಖಾನ್ ಎಂಬುವರನ್ನು ವಿಶೇಷ ತನಿಖಾ ದಳದ (ಐಎಂಎ) ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗುರುವಾರ ರಾತ್ರಿಯೇ ಇಕ್ಬಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಂಪನಿಯ ಮಾಲೀಕ ಮನ್ಸೂರ್ ಖಾನ್ ಅವರ ವ್ಯವಹಾರದ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.
ಬೆಂಗಳೂರು ಫ್ರೇಜರ್ ಟೌನ್ ನ ನಿವಾಸಿಯಾದ ಇಕ್ಬಾಲ್ ಖಾನ್, ಹಲವು ವರ್ಷಗಳಿಂದ ಕಂಪನಿಯ ಲೆಕ್ಕ ತಪಾಸಣೆ ಮಾಡುತ್ತಿದ್ದರು.
ಸಾವಿರಾರು ಜನರಿಂದ ಷೇರು ಸಂಗ್ರಹಿಸಿರುವ ‘ಐಎಂಎ ಸಮೂಹ ಕಂಪನಿ’, ₹ 1,230 ಕೋಟಿ ವಂಚಿಸಿರುವ ಸಂಗತಿ ವಿಶೇಷ ತನಿಖಾ ದಳದ (ಎಸ್ಐಟಿ) ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ರಾಜ್ಯ ಸರ್ಕಾರದ ಆದೇಶದಂತೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಡಿಐಜಿ ಬಿ.ಆರ್.ರವಿಕಾಂತೇಗೌಡ ಅವರ ನೇತೃತ್ವದ ತಂಡ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.
ಪ್ರಕರಣ ಸಂಬಂಧ ಪೊಲೀಸರು ಬಂಧಿಸಿರುವ ಕಂಪನಿಯ ನಿರ್ದೇಶಕರಾದ ನಿಜಾಮುದ್ದೀನ್ ಖಾನ್, ನಾಸೀರ್ ಹುಸೇನ್, ನವೀದ್ ಅಹ್ಮದ್, ಅರ್ಷದ್ ಖಾನ್, ಅನ್ಸರ್ ಪಾಷಾ, ವಾಸೀಂ ಹಾಗೂ ದಾದಾಪೀರ್ ಅವರನ್ನು ಎಸ್ಐಟಿ ತಂಡ ವಶಕ್ಕೆ ಪಡೆಯಿತು.