ಮೈಸೂರು: ಜೆಡಿಎಸ್ ಮುಖಂಡರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾರ್ಯಕರ್ತರು ಜೈಕಾರ ಹಾಕಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಶುಕ್ರವಾರ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ‘ವಿಧಾನಸಭೆ ಚುನಾವಣೆಗೂ ಇಂದಿಗೂ ಸಾಕಷ್ಟು ಬದಲಾವಣೆಯಾಗಿದೆ. ಆಗ ನೀವೆಲ್ಲ ಜೆಡಿಎಸ್ ಅಭ್ಯರ್ಥಿಗಳ ಪರ ಕೆಲಸ ಮಾಡಿ ಸಾಕಷ್ಟು ನೋವು ಅನುಭವಿಸಿದ್ದೀರಿ. ಈಗ ಲೋಕಸಭಾ ಚುನಾವಣೆಗೆ ಒಪ್ಪಂದವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿರಿ’ ಎಂದು ಮನವಿ ಮಾಡಿದರು.
ಇದರಿಂದ ಕಾರ್ಯಕರ್ತರು ಕೆಂಡಾಮಂಡಲವಾದರು. ‘10 ತಿಂಗಳ ಹಿಂದೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪರ ಕೆಲಸ ಮಾಡಿ ಪೊಲೀಸ್ ಸ್ಟೇಷನ್, ಕೋರ್ಟ್ ಮೆಟ್ಟಿಲು ಹತ್ತಿದ್ದೇವೆ. ಈಗ ನೀವು ಒಪ್ಪಂದ ಮಾಡಿಕೊಂಡು ಬಂದರೆ, ನಾವೀಗ ವೋಟ್ ಹಾಕಬೇಕೆ, ಕೆಲಸ ಮಾಡಬೇಕೆ’ ಎಂದು ಪ್ರಶ್ನಿಸಿದರು.
‘ನರೇಂದ್ರ ಮೋದಿಗೆ ಜೈ’ ಎಂದು ಕೂಗುವ ಮೂಲಕ ಗದ್ದಲ ಹೆಚ್ಚುವಂತೆ ಮಾಡಿದರು.
ಬಳಿಕ ಜಿ.ಟಿ.ದೇವೇಗೌಡ ಅವರು ಕಾರ್ಯಕರ್ತರ ಬಳಿ ತೆರಳಿ ಸಮಾಧಾನಗೊಳಿಸಿದರು. ಬಳಿಕ ‘ಜೆಡಿಎಸ್ ಪಕ್ಷಕ್ಕೆ ಜೈ’ ಎಂದು ಹೇಳಿಸುವ ಮೂಲಕ ಅಸಮಾಧಾನ ಶಮನಗೊಳಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಸೋತರೆ ನಾವು ಹೊಣೆಯಲ್ಲ: ಜಿ.ಟಿ.ದೇವೇಗೌಡ
‘ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ನಾನಾಗಲೀ, ಸಚಿವ ಸಾ.ರಾ.ಮಹೇಶ್ ಆಗಲಿ ಹೊಣೆಗಾರರಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಇಲ್ಲಿ ಶುಕ್ರವಾರ ಹೇಳಿದರು.
‘ನಮ್ಮ ಕಾರ್ಯಕರ್ತರನ್ನು ಕಾಂಗ್ರೆಸ್ ಅಭ್ಯರ್ಥಿಯ ಪರ ಕೆಲಸ ಮಾಡುವಂತೆ ಮನವೊಲಿಸಲಾಗಿದೆ. ಆದರೆ, ಕಾರ್ಯಕರ್ತರಲ್ಲಿ ಅಸಮಾಧಾನ ಇರುವುದು ನಿಜ. ಹಾಗಾಗಿ, ಒಂದು ಪಕ್ಷ ಕಾಂಗ್ರೆಸ್ ಅಭ್ಯರ್ಥಿ ಸೋತರೆ ನಾವು ಹೊಣೆಯಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.
‘ಅಲ್ಲದೇ, ರಾಜ್ಯದಲ್ಲಿ ಜೆಡಿಎಸ್ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಗುಮಾನಿ ನಮಗೆ ಉಂಟಾಗಿದೆ. ಚುನಾವಣೆಗಳಲ್ಲಿ ನಮ್ಮನ್ನು ಸೋಲಿಸುವ ಪಿತೂರಿಗಳೂ ನಡೆದಿವೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಚರ್ಚಿಸಿದ್ದಾರೆ. ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದೇವೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.