ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ಮಧ್ಯೆ ಇದ್ದ ಹಳೆಯ ವಿರಸ ಮರೆತಿದ್ದೇವೆ, ಬಿಜೆಪಿ ಸೋಲಿಸಲು ಒಟ್ಟಿಗೆ ಕೆಲಸ ಮಾಡುತ್ತೇವೆ. ಎರಡೂ ಪಕ್ಷಗಳ ಕಾರ್ಯಕರ್ತರು ಇದನ್ನು ಪಾಲಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.
ಶನಿವಾರ ನಗರದ ಅಶೋಕ ಹೊಟೇಲ್ನಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. 12 ವರ್ಷಗಳ ಬಳಿಕ ಇಬ್ಬರೂ ನಾಯಕರು ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ನಮಗೆ ಸಮಾನ ಶತ್ರು. ಅವರನ್ನು ಚುನಾವಣೆಯಲ್ಲಿ ಸೋಲಿಸುವುದೇ ನಮ್ಮ ಏಕೈಕ ಉದ್ದೇಶ. ದೇಶದ ಹಿತ ದೃಷ್ಟಿಯಿಂದ ಎರಡೂ ಪಕ್ಷಗಳ ಒಗ್ಗಟ್ಟಿನಿಂದ ಹೋರಾಡಲಿ ನಿರ್ಧರಿಸಿದ್ದೇವೆ. ಇದಕ್ಕೆ ಕಾರ್ಯಕರ್ತರ ಸಮ್ಮತಿಯೂ ಇದೆ. ಸಣ್ಣಪುಟ್ಟ ಸಮಸ್ಯೆ ಇದ್ದ ಕಡೆ ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಇಬ್ಬರೂ ಹೇಳಿದರು.
ಹಿಂದಿನ ಕಹಿ ಘಟನೆಗಳನ್ನು ನೆನಪಿಸಿಕೊಳ್ಳುವ ಅಗತ್ಯ ಇಲ್ಲ. ದೇಶದ ಒಳಿತಿಗಾಗಿ ಮುಂದೆ ಹೆಜ್ಜೆ ಇಡುತ್ತೇವೆ. ಇದರಲ್ಲಿ ಸ್ವಾರ್ಥ ಇಲ್ಲ. ನೀವು ಪತ್ರಕರ್ತರು ಹಳೆಯದನ್ನು ಕೆದಕಿ ನಮ್ಮ ಮನಸ್ಸನ್ನು ಕೆಡಿಸಲು ಸಾಧ್ಯವಿಲ್ಲ ಎಂದು ದೇವೇಗೌಡ ಹೇಳಿದರು.
ಉಪಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಒಂದಾಗಿರುವ ಜೆಡಿಎಸ್–ಕಾಂಗ್ರೆಸ್ ಮಿತ್ರ ಪಕ್ಷಗಳ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದರು.
ತೋಂಟದಾರ್ಯ ಸ್ವಾಮೀಜಿ ನಿಧನಕ್ಕೆ ಸಂತಾಪ
ಹೃದಯಾಘಾತದಿಂದ ಶನಿವಾರ ಬೆಳಿಗ್ಗೆ ನಿಧನರಾದ ಗದಗದ ತೋಂಟದಾರ್ಯ ಸಂಸ್ಥಾನಮಠದಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ(71) ಅವರಿಗೆ ಸಂತಾಪ ಸೂಚಿಸಿದರು.
ವೇದಿಕೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಇದ್ದರು.
ಮುಂಬರುವ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಬಿಜೆಪಿಯನ್ನು ಎದುರಿಸಲಿವೆ. ಎರಡು ಲೋಕಸಭೆ ಹಾಗೂ ಒಂದು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಹಾಗೂ ಒಂದು ಲೋಕಸಭೆ ಮತ್ತು ಒಂದು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಜಾತ್ಯಾತೀತ ಮತಗಳು ವಿಭಜನೆಯಾಗಬಾರದು ಎಂಬುದು ನಮ್ಮ ಮುಖ್ಯ ಉದ್ದೇಶ. pic.twitter.com/9DuIYZo6Ch
— Siddaramaiah (@siddaramaiah) October 20, 2018
*
ಹಿಂದಿನ ಚುನಾವಣೆಗಳನ್ನು ನಮ್ಮ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರತ್ಯೇಕವಾಗಿ ಎದುರಿಸಿದ್ದು ನಿಜ. ಬಿಜೆಪಿಯನ್ನು ದೂರವಿಡುವ ಸಲುವಾಗಿ ಈ ಬಾರಿ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಜಂಟಿ ಸಭೆಗಳನ್ನು ನಡೆಸಲಿದ್ದು, ಆ ಸಭೆಗಳಲ್ಲಿ ಎರಡೂ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ.@INCKarnataka
— Siddaramaiah (@siddaramaiah) October 20, 2018
*
ಈ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿ ಕೆಲಸ ಮಾಡುವುದರಿಂದ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ. @INCKarnataka
— Siddaramaiah (@siddaramaiah) October 20, 2018
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.