ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ: ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ

Last Updated 6 ಫೆಬ್ರುವರಿ 2018, 5:11 IST
ಅಕ್ಷರ ಗಾತ್ರ

ಮಂಗಳೂರು: ಸಾರ್ವಜನಿಕರ ಅಗತ್ಯ ಹಾಗೂ ಹಿತಾಸಕ್ತಿಗೆ ಅನುಗುಣವಾಗಿ ಸಾರಿಗೆ ವ್ಯವಸ್ಥೆಯ ಕುರಿತಾದ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ಇದರಲ್ಲಿ ಖಾಸಗಿ ಹಿತಾಸಕ್ತಿಗೆ ಆದ್ಯತೆ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಸ್ಪಷ್ಟಪಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಸಮಸ್ಯೆಗಳಿದ್ದರೆ ಅವುಗಳನ್ನು ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಬಸ್‌ ಮಾಲೀಕರ ಸಮಸ್ಯೆಗಳನ್ನೂ ಪರಿಶೀಲಿಸಲಾಗುವುದು. ಆದರೆ, ಸಾರ್ವಜನಿಕರ ಹಿತಾಸಕ್ತಿಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದರು. ಸಭೆಯಲ್ಲಿ ಮಾತನಾಡಿದ ಹನುಮಂತ ಕಾಮತ್‌, ಖಾಸಗಿ ಅಥವಾ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪರವಾನಗಿ ನೀಡುವ ಅಥವಾ ಸಮಯ ಬದಲಾವಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಸಲಹೆ ಪಡೆಯುವುದು ಸೂಕ್ತ ಎಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಸಿಕಾಂತ್ ಸೆಂಥಿಲ್‌, ಎಲ್ಲಿ ಪರವಾನಗಿ ಅಗತ್ಯವಿದೆ. ಎಲ್ಲಿ ನೀಡುವುದು ಸರಿ ಎಂಬುದರ ಬಗ್ಗೆ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ನಿಯಮಾವಳಿ ರೂಪಿಸಲಾಗುವುದು ಎಂದರು.

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಅಥವಾ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಆರ್‌ಟಿಎ ಮಾದರಿಯಲ್ಲಿ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ತಮ್ಮ ಪ್ರದೇಶಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಲು ಆರ್‌ಟಿಎ ಸಭೆಗಾಗಿ ಕಾಯಬೇಕಾಗಿಲ್ಲ. ನೇರವಾಗಿ ಬಂದು ದೂರುಗಳ ಬಗ್ಗೆ ತಿಳಿಸಿದರೆ, ಸಾಧ್ಯವಾದ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಗರ ಸಂಚಾರಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ 14 ಬಸ್‌ಗಳಿಗೆ ಜಿಲ್ಲಾಡಳಿತ ಪರವಾನಗಿ ನೀಡಿತ್ತು. ಆದರೆ, ಖಾಸಗಿ ಬಸ್‌ಗಳ ಮಾಲೀಕರು ಕೋರ್ಟ್‌ ಮೆಟ್ಟಿಲೇರಿದ್ದು, ಎರಡು ವರ್ಷಗಳಿಂದ ನ್ಯಾಯ ದೊರಕಿಲ್ಲ. ಸಾರ್ವಜನಿಕರಿಗೆ ಅಗತ್ಯವಾದ ಬಸ್‌ಗಳ ವ್ಯವಸ್ಥೆಯ ಬಗ್ಗೆ ನ್ಯಾಯ ವಿಳಂಬವಾಗುವುದಕ್ಕೆ ಕೆಎಸ್‌ಆರ್‌ಟಿಸಿಯಿಂದ ವಕೀಲರ ನೇಮಕ ಅಥವಾ ದಾಖಲೆಗಳನ್ನು ಸಲ್ಲಿಸದೇ ಇರುವುದೂ ಕಾರಣವಾಗಿರಬಹುದು. ಈ ಬಗ್ಗೆ ಗಮನ ಹರಿಸುವಂತೆ ಹನುಮಂತ ಕಾಮತ್ ಆಗ್ರಹಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್‌. ರವಿಕಾಂತೇಗೌಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್‌. ಹೆಗ್ಡೆ ಇದ್ದರು.

ಖಾಸಗಿ ವಾಹನಗಳಿಗೆ ಇಆರ್‌ಪಿ: ಚಿಂತನೆ

ನಗರದಲ್ಲಿ ಸುಗಮ ಸಂಚಾರಕ್ಕಾಗಿ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಖಾಸಗಿ ವಾಹನಗಳಿಗೆ ಎಲೆಕ್ಟ್ರಾನಿಕ್‌ ರೋಡ್‌ ಪ್ರೈಸ್‌ (ಇಆರ್‌ಪಿ) ಅನುಷ್ಠಾನಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಹೇಳಿದರು.

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಗರದಲ್ಲಿ ವಾಹನದ ದಟ್ಟಣೆ ಹೆಚ್ಚುತ್ತಿದ್ದು, ನಗರ ವ್ಯಾಪ್ತಿಯಲ್ಲಿ ಪದೇ ಪದೇ ರಸ್ತೆ ವಿಸ್ತಾರ ಮಾಡುವ ಬದಲು, ಅನಗತ್ಯವಾಗಿ ಖಾಸಗಿ ವಾಹನಗಳು ನಗರದಲ್ಲಿ ಓಡಾಡುವುದನ್ನು ತಪ್ಪಿಸಬೇಕಾಗಿದೆ. ಅದಕ್ಕಾಗಿ ಇಆರ್‌ಪಿ ವ್ಯವಸ್ಥೆ ಅಗತ್ಯವಾಗಿದೆ ಎಂದರು.

ಇಆರ್‌ಪಿ ವ್ಯವಸ್ಥೆ ವಿದೇಶಗಳಲ್ಲಿ ಈಗಾಗಲೇ ಚಾಲ್ತಿಯಲ್ಲಿದೆ. ಇದು ಎಲೆಕ್ಟ್ರಾನಿಕ್‌ ವ್ಯವಸ್ಥೆಯಾಗಿದ್ದು, ಖಾಸಗಿ ವಾಹನಗಳು ನಗರ ಪ್ರವೇಶಿಸುವ ಸಂದರ್ಭದಲ್ಲಿ ವಾಹನಗಳ ಮಾಲೀಕರಿಂದ ನಿಗದಿತ ಪ್ರಯಾಣದರವನ್ನು ಪಡೆಯಲಾಗುತ್ತದೆ. ಇದರಿಂದ ಸಾರ್ವಜನಿಕ ಸಾರಿಗೆಗೆ ಒತ್ತು ಸಿಗಲಿದ್ದು, ವಾಹನಗಳ ದಟ್ಟಣೆಯೂ ಕಡಿಮೆ ಆಗಲಿದೆ ಎಂದು ಅಭಿಪ್ರಾಯಪಟ್ಟರು.

* * 

ಇಆರ್‌ಪಿ ಜಾರಿ ಕುರಿತು ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಶೀಘ್ರ ಸಭೆ ನಡೆಸಿ, ದರವನ್ನು ನಿಗದಿ ಪಡಿಸಲಾಗುವುದು.
ಸಸಿಕಾಂತ್‌ ಸೆಂಥಿಲ್‌
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT