ಬೆಂಗಳೂರು: ತಮ್ಮ ವೇಗಕ್ಕೆ ಸ್ಪಂದಿಸದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಡಾ.ವಿಶಾಲ್ ಅವರನ್ನು ಬದಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದರು.
ಬುಧವಾರ ಇಲಾಖೆ ಪ್ರಗತಿಪರಿಶೀಲನಾ ಸಭೆಯಲ್ಲಿ ಈಶ್ವರಪ್ಪ ಈ ವಿಷಯ ಪ್ರಸ್ತಾಪಿಸಿದರು ಎಂದು ಮೂಲಗಳು ತಿಳಿಸಿವೆ.
ಆಯುಕ್ತರು ರಾಜ್ಯದ ಯಾವುದೇ ಜಿಲ್ಲೆಗೂ ಭೇಟಿ ನೀಡಿಲ್ಲ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ಬೆಂಗಳೂರಿನಲ್ಲಿ ಕಚೇರಿಯಲ್ಲಿ ಕುಳಿತುಕೊಂಡಿದ್ದರೆ, ಪರಿಣಾಮಕಾರಿ ಕೆಲಸ ಮಾಡಲು ಸಾಧ್ಯವೇ ಎಂದು ಈಶ್ವರಪ್ಪ ಪ್ರಶ್ನಿಸಿದರು.
ಅಧಿಕಾರಿಗಳು ಕಚೇರಿಯಲ್ಲಿ ಅಂಟಿಕೊಂಡು ಕೂರದೇ ರಾಜ್ಯ ವ್ಯಾಪಿ ಓಡಾಟ ನಡೆಸಿ ಕೆಲಸ ಮಾಡಬೇಕು. ಸಚಿವರ ವೇಗಕ್ಕೆ ತಕ್ಕಂತೆ ಕೆಲಸ ಮಾಡಬೇಕೆಂದು ಯಡಿಯೂರಪ್ಪ ತಾಕೀತು ಮಾಡಿದರು ಎಂದು ಮೂಲಗಳು ತಿಳಿಸಿವೆ.