ಸಮ್ಮೇಳನ ನಡೆಸಲು ₹ 14 ಕೋಟಿ ವೆಚ್ಚವಾಗಬಹುದು ಎಂದು ಕಸಾಪ ಕೇಂದ್ರ ಸಮಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪ್ರಸ್ತಾವ ಸಲ್ಲಿಸಿದೆ. ಇಲಾಖೆ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಅಲ್ಲದೇ, ಇತ್ತೀಚೆಗೆ ಸಮ್ಮೇಳನದ ಪೂರ್ವಸಿದ್ಧತಾ ಸಭೆ ನಡೆಸಿದ್ದ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ‘ಸಮ್ಮೇಳನಕ್ಕೆ ಸರ್ಕಾರ ತನ್ನ ಪಾಲಿನ ಹಣ ನೀಡಲಿದೆ. ಜೊತೆಗೆ ಜಿಲ್ಲೆಯ ದಾನಿಗಳಿಂದಲೂ ಹಣ ಸಂಗ್ರಹಿಸಿ’ ಎಂದು ಸೂಚನೆ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿ ಶರತ್ ಬಿ. ಈ ಸಂಬಂಧ ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆ, ಸಿಮೆಂಟ್ ಕಾರ್ಖಾನೆಗಳ ಮುಖ್ಯಸ್ಥರು, ಉದ್ಯಮಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ಬರೆದು ನೆರವು ಕೇಳಿದ್ದಾರೆ. ಆದರೆ, ನಿರೀಕ್ಷಿತ ಮಟ್ಟಿಗೆ ನಿಧಿ ಸಂಗ್ರಹವಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.