ರಾಮನಗರ: ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿ ಬಂಧನಕ್ಕೆ ಒಳಗಾಗಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶರನ್ನು ಪೊಲೀಸರು ಗುರುವಾರ ಮಧ್ಯಾಹ್ನದ ಒಳಗೆ ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಸದ್ಯ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಬಿಡದಿ ಪೊಲೀಸ್ ಠಾಣೆಗೆ ಕರೆತರಲಾಗುತ್ತಿದೆ. ಅಲ್ಲಿ ಪೊಲೀಸರು ಗಣೇಶ್ ಹೇಳಿಕೆ ದಾಖಲಿಸಲಿದ್ದಾರೆ. ಬಳಿಕ ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ. ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ.
ಬಿಡದಿ ಪೊಲೀಸ್ ಠಾಣೆ ಹಾಗೂ ರಾಮನಗರ ನ್ಯಾಯಾಲಯದ ಆವರಣದಲ್ಲಿ ಪೊಲೀಸರು ಹೆಚ್ಚಿನ ಭದ್ರತೆ ಕಲ್ಪಿಸಿದ್ದಾರೆ.
ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿ ಗಣೇಶ್ ಒಂದು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು.
ಗುಜರಾತ್ನ ದೇವಸ್ಥಾನಕ್ಕೆ ಹೋಗಿದ್ದ ಗಣೇಶ್, ಸೋಮನಾಥ ಪಟ್ಟಣದಲ್ಲಿ ಊಟ ಮಾಡಲು ಇಳಿದಿದ್ದರು. ಆಗ ರಾಮನಗರ ಪೊಲೀಸರ ತಂಡ ಆರೋಪಿಯನ್ನು ವಶಕ್ಕೆ ಪಡೆಯಿತು. ಗಣೇಶ್ ಜೊತೆ ಇದ್ದ ಮೂವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.