ಶಿವಮೊಗ್ಗ/ದಾವಣಗೆರೆ: ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಹರಿಹರಕ್ಕೆ ತೆರಳುವ ಮುನ್ನ ಇಲ್ಲಿನ ಜಿ.ಎಂ.ಐ.ಟಿ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ನಾನು ಒಬ್ಬ ರೈತನ ಮಗನಾಗಿ, ಸಹಜವಾಗಿ ಕೃಷಿಗೆ ಆದ್ಯತೆ ಕೊಡುತ್ತೇನೆ. ರೈತಪರ ಬಜೆಟ್ ಮಂಡಿಸುತ್ತೇನೆ’ ಎಂದರು.
ರೈತರಿಗೆ ಪ್ರತ್ಯೇಕ ಬಜೆಟ್ ಮಂಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ‘ಅದು ಇನ್ನೂ ನಿರ್ಧಾರ ಆಗಿಲ್ಲ’ ಎಂದು ಹೇಳಿದರು.
ಇದಕ್ಕೂ ಮುನ್ನ ಶಿವಮೊಗ್ಗದ ಶಿಕಾರಿಪುರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದೇನೆ ಎಂದು ಹೇಳಿದ್ದಾರೆ.
ಇದೇ 18 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು, ಅವರೊಂದಿಗೆ ಚರ್ಚೆ ನಡೆಸಿ ಆದಷ್ಟು ಬೇಗನೆ ಸಂಪುಟ ವಿಸ್ತರಣೆ ಮಾಡುತ್ತೇನೆ. ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಭಾಗವಹಿಸಲು ತೆರಳಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.