ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲೆಲ್ಲಾ ಬಿಜೆಪಿ ಸರ್ಕಾರ ಬಿದ್ದು ಹೋಗುತ್ತೆ ಆಂತ ಹೇಳ್ತಿದ್ರು. ಈಗ ಈ ಸರ್ಕಾರ ಸುಭದ್ರವಾಗಿರಬೇಕು ಎಂದು ಜನರೇ ಆಶೀರ್ವದಿಸಿದ್ದಾರೆ. ನೈತಿಕತೆ ಇದ್ದರೆ ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಕಂದಾಯ ಸಚಿವ ಆರ್.ಆಶೋಕ್ ಆಗ್ರಹಿಸಿದರು.
ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುತೇಕ ಕಡೆ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರನ್ನು ಸ್ಥಾನದಿಂದ ಇಳಿಸುವ ಪ್ರಯತ್ನಗಳು ಕಾಂಗ್ರೆಸ್ನಲ್ಲಿ ನಡೆಯಲಿವೆ ಎಂದರು.
ಸಮ್ಮಿಶ್ರ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸಿದ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರ ನಡೆ ಅಕ್ರಮ, ಜನ ವಿರೋಧಿ ಮತ್ತು ಕಾನೂನು ವಿರೋಧಿ ಎನ್ನುವುದನ್ನು ಜನರು ಈಗ ತಮ್ಮ ತೀರ್ಪು ನೀಡಿ ಘೋಷಿಸಿದ್ದಾರೆ ಎಂದು ಅಶೋಕ್ ವಿಶ್ಲೇಷಿಸಿದರು.