ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ನಿಚ್ಚಳವಾಗಿದೆ.
‘ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಿಸಬೇಕೆಂಬುದು ನಮ್ಮ ಉದ್ದೇಶ. ಈ ಕುರಿತು ಉಸ್ತುವಾರಿ ವೇಣುಗೋಪಾಲ್ ಬಳಿ ಚರ್ಚೆ ನಡೆಸಿದ್ದೇವೆ’ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.
‘ಮೊದಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ವೇಣುಗೋಪಾಲ್ ಚರ್ಚಿಸುತ್ತಾರೆ. ಬಳಿಕ ಅದನ್ನು ನಮಗೆ ತಿಳಿಸುತ್ತಾರೆ. ಆದರೆ, ರಾಹುಲ್ ಗಾಂಧಿ ಸದ್ಯ ಪಂಚ ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದಾರೆ’ಎಂದರು.
‘ರಾಹುಲ್ ಗಾಂಧಿ - ವೇಣುಗೋಪಾಲ್ ಭೇಟಿ ಇನ್ನೂ ಆಗಿಲ್ಲ. ರಾಹುಲ್ ಗಾಂಧಿ ಅವರಿಂದ ಹಸಿರು ನಿಶಾನೆ ಸಿಕ್ಕಿದ ಕೂಡಲೇ ಸಂಪುಟ ವಿಸ್ತರಣೆ ಮಾಡುತ್ತೇವೆ’ಎಂದರು.
‘ಬಳ್ಳಾರಿ ಜನ ಉಗ್ರಪ್ಪರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಿದ್ದಾರೆ. ಬಳ್ಳಾರಿ ಮತದಾರರಿಗೆ ಗುರುವಾರ ( ನ.22) ಕೃತಜ್ಞತಾ ಸಮಾರಂಭ ಹಮ್ಮಿಕೊಂಡಿದ್ದೇವೆ. ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕರೆಲ್ಲರೂ ಹೋಗುತ್ತೇವೆ’ಎಂದರು.