ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಇಡೀ ಸಮಾಜ ಎದುರು ನೋಡುತ್ತಿದ್ದು, ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಸಚಿವ ಸುರೇಶ್ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆಯ ಕುರಿತಂತೆ ರಾಜ್ಯಾದ್ಯಂತ 31 ಜಿಲ್ಲಾ ಕೇಂದ್ರಗಳಿಗೆ ಕಳೆದ ಹದಿನೈದು ದಿನಗಳಲ್ಲಿ ಸುಮಾರು ಐದು ಸಾವಿರ ಕಿಲೋಮೀಟರ್ ಗಳಷ್ಟು ಸಂಚಾರ ಕೈಗೊಂಡು, ಸಭೆ ನಡೆಸಿ ನಿರ್ದೇಶನ ನೀಡಿರುವ ಸಚಿವ ಸುರೇಶ್ ಕುಮಾರ್, ಬುಧವಾರ ತಮ್ಮ ಅಭಿಯಾನದ ಕಡೆಯ ಭಾಗವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿದರು.
ಹೈಕೋರ್ಟ್ ನಿರ್ದೇಶನದ ಅನುಸಾರ ನಡೆಯುತ್ತಿರುವ ಪರೀಕ್ಷೆಗಳು ಸಮಾಜಕ್ಕೆ ಭರವಸೆಯನ್ನು ಮೂಡಿಸುವ ರೀತಿಯಲ್ಲಿ ಅಚ್ಚುಕಟ್ಟಾಗಿ ನಿರ್ವಹಣೆಯಾಗಬೇಕು, ಪರೀಕ್ಷೆಗಳು ನಡೆಯುತ್ತಿರುವ ಇದೊಂದು ವಿಶಿಷ್ಟ ಸಾಮಾಜಿಕ ಸಂದರ್ಭವನ್ನು ಪ್ರತಿಷ್ಠೆಯಾಗಿ ಪರಿಗಣಿಸದೇ ನಮ್ಮ ಸಾಮಾಜಿಕ ಬದ್ಧತೆಗೆ ಸವಾಲಾಗಿ ಪರಿಗಣಿಸಿ ಎಲ್ಲ ಅಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕೆಂದು ಸಚಿವರು ಸೂಚಿಸಿದರು.
ವಿದ್ಯಾರ್ಥಿ ಪೋಷಕರ ನಿರೀಕ್ಷೆಗೆ ಅನುಗುಣವಾಗಿ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆಯಬೇಕು ಎಂದು ಅವರು ಸೂಚಿಸಿದರು.
ಪರೀಕ್ಷೆಗೆ ಮುಂಚೆಯೇ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಸಹಕಾರದಿಂದ ಸ್ಯಾನಿಟೈಜ್ ಮಾಡಬೇಕಲ್ಲದೇ, ಪ್ರತಿ ದಿನದ ಪರೀಕ್ಷೆಯ ಬಳಿಕವೂ ಸ್ಯಾನಿಟೈಜ್ ಕ್ರಮಗಳನ್ನು ಅನುಸರಿಸಬೇಕೆಂದು ಅವರು ಸೂಚಿಸಿದರು.
ದೂರದರ್ಶನದ ಚಂದನದಲ್ಲಿ ವಿಶೇಷ ಪುನರ್ಮನನ: ಪ್ರಶ್ನೆ ಪತ್ರಿಕೆಯಾಧಾರಿತವಾದ ವಿಶೇಷ ಪುನರ್ಮನನ ತರಗತಿಗಳನ್ನು ಇದೇ ತಿಂಗಳ12 ರಿಂದ 17 ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಎಲ್ಲ ವಿದ್ಯಾರ್ಥಿಗಳು ಇದರ ಸದ್ಬಳಕೆಮಾಡಿಕೊಳ್ಳಬೇಕೆಂದು ಹೇಳಿದರು.
ಆರೋಗ್ಯ ಇಲಾಖೆಯ ಸಹಕಾರ ಬಳಸಿಕೊಳ್ಳಲು ಸೂಚನೆ: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದು, ಮಕ್ಕಳು ಹಾಗೂ ಪೋಷಕರಲ್ಲಿ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ನಿಟ್ಟಿನಲ್ಲಿ ಮಾಹಿತಿ ಕರಪತ್ರಗಳು, ವಿಡಿಯೋ ಸಂದೇಶಗಳನ್ನು ರಾಜ್ಯಾದ್ಯಂತ ಪ್ರತಿ ಪೋಷಕ, ವಿದ್ಯಾರ್ಥಿಗೆ ತಲುಪಿಸುವ ಕ್ರಮಕ್ಕೆ ಮುಂದಾಗಲಾಗುವುದೆಂದ ಸಚಿವರು, ಶಿಕ್ಷಣ ಇಲಾಖೆಯ ಸಿಬ್ಬಂದಿಯು ಇಲಾಖೆಯ ಈ ಸದಾಶಯವನ್ನು ವಿದ್ಯಾರ್ಥಿ-ಪೋಷಕರಿಗೆ ತಲುಪಿಸುವ ವಾಹಕರಾಗಿ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.
ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್, ಬೆಂಗಳೂರುನಗರ ಹಾಗೂ ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಈ ಜಿಲ್ಲೆಗಳ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.