ಬೆಂಗಳೂರು: ‘ದೇಶದ ಮತದಾರರು ಬದಲಾವಣೆ ಬಯಸಿದ್ದಾರೆ. ಈ ಬಾರಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬರಲಿದೆ’ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.
‘ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ, ದೇವೇಗೌಡ ಸೋಲಲಿದ್ದಾರೆ’ ಎಂದು ಯಡಿಯೂರಪ್ಪ ನೀಡಿದ ಹೇಳಿಕೆ ಪ್ರತಿಕ್ರಿಯಿಸಿದ ಅವರು, ‘ಮೋದಿ ನಾಟಕ ಈ ಬಾರಿ ನಡೆಯುವುದಿಲ್ಲ. ಲೋಕಸಭೆ ಚುನಾವಣೆ ಫಲಿತಾಶ ಪ್ರಕಟಗೊಂಡ ಬಳಿಕ ಸಮಸ್ಯೆ ಎದುರಿಸುವವರು ಯಡಿಯೂರಪ್ಪ’ ಎಂದು ತಿರುಗೇಟು ನೀಡಿದರು.
ರಮೇಶ ಜಾರಕಿಹೊಳಿ ಅವರ ನಿಗೂಢ ನಡೆಯ ಬಗ್ಗೆ ಪ್ರಶ್ನಿಸಿದಾಗ, ‘ಊಹಾತ್ಮಕ ಪ್ರಶ್ನೆಗಳಿಗೆ ನಾನು ಹೇಗೆ ಉತ್ತರಿಸಲಿ. ಈಗ ಮಹತ್ವ ಇರುವುದು ಲೋಕಸಭೆ ಚುನಾವಣೆ ವಿಚಾರಕ್ಕೆ’ ಎಂದಷ್ಟೆ ಹೇಳಿದರು.
‘ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಮತ್ತು ಉಪ ಚುನಾವಣೆ ನಡೆಯುವ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.