ಚಳ್ಳಕೆರೆ: ವಿಧಾನಸಭೆ ಶಾಸಕ ಸ್ಥಾನಕ್ಕಾಗಿ ಮರು ಆಯ್ಕೆ ಬಯಸಿ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ ತಮ್ಮ ಅಪಾರ ಬೆಂಬಲಿಗರೊಂದಿಗೆ ತಾಲ್ಲೂಕು ಕಚೇರಿಗೆ ಬಂದು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪ್ರಮುಖ ಹೋಬಳಿಗಳಾದ ತುರುವನೂರು, ಪರಶುರಾಂಪುರ, ನನ್ನಿವಾಳ, ಸಾಣಿಕೆರೆ ಸೇರಿ
ಹಲವು ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದರು.
ಬಸ್, ಕಾರು, ಟ್ರಾಕ್ಟರ್,ಆಟೊ, ಟಾಟಾ ಎಸ್, ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ ಟಿ.ರಘುಮೂರ್ತಿ ಅಭಿಮಾನಿಗಳು ತಾಲ್ಲೂಕು ಕಚೇರಿ ಆವರಣದಲ್ಲಿ ಸೇರಿದ್ದರು. ಚಿತ್ರದುರ್ಗ, ಪಾವಗಡ, ಬೆಂಗಳೂರು ಮತ್ತು ಬಳ್ಳಾರಿ ರಸ್ತೆಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆ ತಂದಿದ್ದ ವಾಹನಗಳು ನಿಂತಿದ್ದವು. ನಗರದಲ್ಲಿ ಕಿಕ್ಕಿರಿದು ತುಂಬಿದ್ದ ಜನರಿಂದ ವಾಹನ ದಟ್ಟಣೆ ಹೆಚ್ಚಾಗಿ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.
ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಟಿ.ರಘುಮೂರ್ತಿ ಮಾತನಾಡಿ, ‘ಚಳ್ಳಕೆರೆ ವಿಧಾನಸಭೆ ಕ್ಷೇತ್ರದ ಶಾಸಕನಾಗಿ 2013ರಲ್ಲಿ 23 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದ ಗೆಲುವನ್ನು ಸಾಧಿಸಲು ಸಾಧ್ಯವಾಗಿತ್ತು. ಶಾಸಕನಾದ ನಂತರ ಐದು ವರ್ಷಗಳ ಅವಧಿಯಲ್ಲಿ ಜನರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದೀರಿ. ಪ್ರಸ್ತುತ 2018ರ ಚುನಾವಣೆಯಲ್ಲಿ ಸಹ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಜನರ ಸೇವೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಪತ್ನಿ ಶ್ರೀಮಂತೆ
ಶಾಸಕ ಟಿ. ರಘುಮೂರ್ತಿ ಅವರ ಚರ ಮತ್ತು ಸ್ಥಿರಾಸ್ತಿ ಒಟ್ಟು ₹ 1.99 ಕೋಟಿ ಮಾತ್ರ ಆಗಿದ್ದರೆ ಅವರ ಪತ್ನಿ ಗಾಯತ್ರಿಯಮ್ಮ ಒಟ್ಟು ₹ 17 ಕೋಟಿ ಆಸ್ತಿ ಹೊಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.