ನವದೆಹಲಿ: ಕೆಪಿಸಿಸಿ ಪುನಶ್ಚೇತನದ ನಿಟ್ಟಿನಲ್ಲಿ ಶೀಘ್ರವೇ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿರುವ ದಿನೇಶ್ ಗುಂಡೂರಾವ್ ಕಾಂಗ್ರೆಸ್ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಶನಿವಾರ ಇಲ್ಲಿ ಭೇಟಿ ಮಾಡಿ ಚರ್ಚಿಸಿರುವ ಅವರು, ರಾಜ್ಯದಲ್ಲಿ ಪಕ್ಷ ಎದುರಿಸುತ್ತಿರುವ ಸ್ಥಿತಿಗತಿಯ ಕುರಿತು ವಿವರ ನೀಡಿದ್ದಾರೆ. ಅಲ್ಲದೆ, ಕೂಡಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಇತರ ಪದಾಧಿಕಾರಿಗಳನ್ನು ನೇಮಿಸುವಂತೆ ಕೋರಿದ್ದಾರೆ.
ಪಕ್ಷದ ಭವಿಷ್ಯದ ದೃಷ್ಟಿಯಿಂದ ವಿಳಂಬ ಮಾಡದೆ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾಗಿ ದಿನೇಶ್ ಅವರು ನಂತರ ಸುದ್ದಿಗಾರರಿಗೆ ತಿಳಿಸಿದರು.
‘ನೇಮಕಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ರಾಜ್ಯ ಮುಖಂಡರು ಸಹಕರಿಸಲಿದ್ದಾರೆ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿದ ಸಂದರ್ಭವೂ ಚರ್ಚಿಸಿರುವುದಾಗಿ ತಿಳಿಸಲಾಗಿದೆ’ ಎಂದು ಅವರು ವಿವರಿಸಿದರು.
ವೇಣುಗೋಪಾಲ್ ಅವರೊಂದಿಗೆ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ರಾಹುಲ್ ಭರವಸೆ ನೀಡಿದ್ದು, ಸೋಮವಾರದ ನಂತರ ನೇಮಕ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.