ಬೆಂಗಳೂರು: ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಮ್ಮೆ ಪ್ರಸ್ತಾವ ಸಲ್ಲಿಸಲು ಸಾರಿಗೆ ಇಲಾಖೆ ಮುಂದಾಗಿದೆ.
ಮಾಧ್ಯಮಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ‘ಈ ಹಿಂದೆ ಶೇ 18ರಷ್ಟು ಪ್ರಯಾಣ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಈಗ ಮತ್ತೆ ಪ್ರಸ್ತಾವ ಸಲ್ಲಿಸಿ ವಿವೇಚನೆಗೆ ಅನುಸಾರವಾಗಿ ದರ ಏರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು’ ಎಂದು ತಿಳಿಸಿದರು.
‘ಬುಧವಾರ ನಡೆದ ಮಂಡಳಿ ಸಭೆಯಲ್ಲೂ ಸಾರಿಗೆ ನಿಗಮಗಳ ಆಡಳಿತ ನಿರ್ದೇಶಕರು ಪ್ರಯಾಣ ದರ ಏರಿಸುವಂತೆ ಒತ್ತಾಯಿಸಿದ್ದಾರೆ. ಡೀಸೆಲ್ ದರ ಹೆಚ್ಚಳವಾಗಿರುವುದರಿಂದ ಸಾರಿಗೆ ನಿಗಮಗಳು ಸುಮಾರು ₹ 677 ಕೋಟಿ ನಷ್ಟ ಅನುಭವಿಸುತ್ತಿವೆ. ಹೀಗಾಗಿ, ದರ ಏರಿಕೆ ಅನಿವಾರ್ಯವಾಗಿದೆ’ ಎಂದರು.
‘ಡೀಸೆಲ್ ದರ ಪ್ರತಿ ಲೀಟರ್ಗೆ ₹ 53 ಇದ್ದಾಗ ಬಸ್ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಮುಖ್ಯಮಂತ್ರಿಗೆ ಸದ್ಯದ ವಾಸ್ತವ ಚಿತ್ರಣ ತಿಳಿಸಿ ಸ್ವಲ್ಪವಾದರೂ ದರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು’ ಎಂದರು.
ಅಕ್ರಮಗಳಿಗೆ ತಡೆ: ‘ಟೋಲ್ಗಳನ್ನು ಮೇಲ್ದರ್ಜೆಗೇರಿಸಲು ಚಿಂತನೆ ನಡೆದಿದೆ. ವೆಹಿಕಲ್ ಟ್ರ್ಯಾಕಿಂಗ್ ಸಿಸ್ಟಂ ಅಳವಡಿಸುವುದರ ಜೊತೆಗೆ ಎಲ್ಲ ಟೋಲ್ಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಉದ್ದೇಶಿಸಲಾಗಿದೆ’ ಎಂದರು.
‘ಟೋಲ್ಗಳಲ್ಲಿ ವಸೂಲಿ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅಕ್ರಮ ನಡೆದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ವಿವರಿಸಿದರು.