ಬೆಳಗಾವಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ಸಂಬಂಧಿಸಿ ಕೆ. ಕಸ್ತೂರಿ ರಂಗನ್ ಸಮಿತಿಯ ವರದಿಯಲ್ಲಿ ಮಾಡಲಾಗಿರುವ ಶಿಫಾರಸುಗಳನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ತಿರಸ್ಕರಿಸುವ ಸಾಧ್ಯತೆ ಇದೆ.
ಕಸ್ತೂರಿ ರಂಗನ್ ಸಮಿತಿಯ ವರದಿಯ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸುತ್ತಿರುವ ಅರಣ್ಯ ಸಚಿವ ಆರ್. ಶಂಕರ್ನೇತೃತ್ವದಸಚಿವ ಸಂಪುಟ ಉಪ ಸಮಿತಿಯು ವರದಿಯನ್ನು ತಿರಸ್ಕರಿಸಿ ತನ್ನ ನಿಲುವನ್ನು ಕೇಂದ್ರ ಸರ್ಕಾರಕ್ಕೆ ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎನ್ನಲಾಗಿದೆ.
ಡಿಸೆಂಬರ್ 5ರಂದುಸಚಿವ ಸಂಪುಟ ಉಪ ಸಮಿತಿಯು ಸಭೆ ನಡೆಸಿದ್ದು, ವರದಿ ತಿರಸ್ಕರಿಸುವಂತೆ ಶಿಫಾರಸು ಮಾಡುವನಿರ್ಧಾರ ಕೈಗೊಳ್ಳಲಾಗಿದೆ.
ಸಮಿತಿಯ ನಿರ್ಧಾರವನ್ನು ಬುಧವಾರ ವಿಧಾನಸಭೆಗೆ ತಿಳಿಸಿರುವ ಶಂಕರ್ ಅವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುತ್ತಿರುವ ಸಾವಿರಾರು ಜನರಿಗೆ ಸಮಸ್ಯೆಯುಂಟುಮಾಡಬಲ್ಲ ಮತ್ತು ಅಭಿವೃದ್ಧಿಗೆ ತೊಡಕಾಗುವಂತಹ ವರದಿಯನ್ನು ತಿರಸ್ಕರಿಸುವಂತೆ ಸಚಿವ ಸಂಪುಟವನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ.
‘ನನ್ನ ನೇತೃತ್ವದ ಉಪ ಸಮಿತಿಯು ಕಸ್ತೂರಿ ರಂಗನ್ ವರದಿಯ ಶಿಫಾರಸುಗಳನ್ನು ತಿರಸ್ಕರಿಸುವ ನಿರ್ಧಾರ ಕೈಗೊಂಡಿದೆ. ಈ ವಿಚಾರವನ್ನು ಶೀಘ್ರದಲ್ಲೇ ಸಚಿವ ಸಂಪುಟದ ಮುಂದಿರಿಸಲಾಗುವುದು. ವರದಿಯನ್ನು ಅನುಷ್ಠಾನಗೊಳಿಸಲು ಬಯಸುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಈ ಹಿಂದೆಯೂ ಕರ್ನಾಟಕ ಸರ್ಕಾರ ವರದಿಯನ್ನು ತಿರಸ್ಕರಿಸಿತ್ತು. ಆದರೆ, ಅದನ್ನು ಮಾನ್ಯ ಮಾಡದ ಕೇಂದ್ರ ಸರ್ಕಾರ ನಾಲ್ಕನೇ ಬಾರಿ ಸುತ್ತೋಲೆ ಹೊರಡಿಸಿತ್ತು’ ಎಂದು ಸಚಿವ ಶಂಕರ್ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.