ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

ಸಿಎಎ ಬೆಂಬಲಿಸಿ ಮೆರವಣಿಗೆ ಯತ್ನ
Last Updated 4 ಜನವರಿ 2020, 20:08 IST
ಅಕ್ಷರ ಗಾತ್ರ

ಕೋಲಾರ: ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ಶನಿವಾರ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಾಗಿರುವ ಕ್ಲಾಕ್‌ ಟವರ್‌ ಮಾರ್ಗವಾಗಿ ಮೆರವಣಿಗೆ ನಡೆಸಲು ಮುಂದಾದ ಬಿಜೆಪಿ ಕಾರ್ಯ
ಕರ್ತರು ಹಾಗೂ ಭಾರತೀಯ ಹಿತರಕ್ಷಣಾ ವೇದಿಕೆ ಸದಸ್ಯರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಿಜೆಪಿ, ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳನ್ನು ಒಳಗೊಂಡ ಭಾರತೀಯ ಹಿತರಕ್ಷಣಾ ವೇದಿಕೆಯು ನಗರದ ಎಂ.ಜಿ ರಸ್ತೆಯ ಚಂಪಕ್‌ ವೃತ್ತದಲ್ಲಿ ಸಿಎಎ ಬೆಂಬಲಿಸಿ ವೇದಿಕೆ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿತ್ತು. ಆದರೆ ಮೆರವಣಿಗೆಗೆ ಪೊಲೀಸ್‌ ಇಲಾಖೆಯು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅನುಮತಿ ನಿರಾಕರಿಸಿತ್ತು.

ಆದರೆ, ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ವೇದಿಕೆ ಸದಸ್ಯರು ಕ್ಲಾಕ್‌ ಟವರ್‌ ಮಾರ್ಗವಾಗಿ ಮೆರವಣಿಗೆ ನಡೆಸಲು ಮುಂದಾದರು. ಪೊಲೀಸರು ಮೆರವಣಿಗೆಗೆ ತಡೆಯೊಡ್ಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದರು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ಕಾರ್ಯಕರ್ತರು ದಿಕ್ಕಾಪಾಲಾಗಿ ಓಡಿದ್ದರಿಂದ ನೂಕುನುಗ್ಗಲು ಉಂಟಾಗಿ, ಮೂವರು ಪೊಲೀಸರೂ ಗಾಯಗೊಂಡರು.

ಮುಸ್ಲಿಂ ಸಮುದಾಯದವರು ಬಿಜೆಪಿಯ ಜನಾಂದೋಲನಕ್ಕೆ ಪ್ರತಿಯಾಗಿ ಕ್ಲಾಕ್‌ ಟವರ್‌ನಿಂದ ಪ್ರವಾಸಿ ಮಂದಿರದವರೆಗೆ ಮೆರವಣಿಗೆ ನಡೆಸಲು ಮುಂದಾದರು.

ಕಪಾಳಮೋಕ್ಷ!

ಲಾಠಿ ಪ್ರಹಾರದ ವೇಳೆ ಪ್ರವಾಸಿ ಮಂದಿರದಲ್ಲಿದ್ದ ಸಚಿವರಾದ ಆರ್‌.ಅಶೋಕ್‌, ಎಚ್‌.ನಾಗೇಶ್‌ ಹಾಗೂ ಸಂಸದ ಎಸ್‌.ಮುನಿಸ್ವಾಮಿ ಘಟನಾ ಸ್ಥಳಕ್ಕೆ ಬರಲಿಲ್ಲ. ಇದರಿಂದ ಅಸಮಾಧಾನಗೊಂಡ ಪಕ್ಷದ ಕಾರ್ಯಕರ್ತರು ವೇದಿಕೆ ಕಾರ್ಯಕ್ರಮದಲ್ಲಿ ಸಚಿವರು ಮತ್ತು ಸಂಸದರ ವಿರುದ್ಧ ಧಿಕ್ಕಾರ ಕೂಗಿ
ದರು. ಮನವೊಲಿಕೆಗೆ ಮುಂದಾದ ಅಶೋಕ್‌ ಮತ್ತು ಮುನಿಸ್ವಾಮಿ ಅವರನ್ನು ಕಾರ್ಯಕರ್ತರು ತೀವ್ರ ತರಾಟೆಗೆ ತೆಗೆದುಕೊಂಡರು. ತಾಳ್ಮೆ ಕಳೆದುಕೊಂಡ ಮುನಿಸ್ವಾಮಿ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT