ಬೆಂಗಳೂರು: ‘ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ ಸಾಫ್ಟ್ವೇರ್ ಎಂಜಿನಿಯರ್ ಶಾರದಾ ಡೈಮಂಡ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತಂತೆ ಶಾರದಾ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ರಜಾಕಾಲದ ವಿಶೇಷ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಶ್ರೀರಾಂಪುರ ಠಾಣೆ ಪೊಲೀಸ್ ಅಧಿಕಾರಿ ಹಾಗೂ ಫಿರ್ಯಾದುದಾರ ಜೆ.ಶರವಣ ಅವರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ. ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಲಾಗಿದೆ.
ಪ್ರಕರಣವೇನು?: ‘ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್ಡಿಇ ಸಂಸ್ಥೆಯ ಲೆಟರ್ ಹೆಡ್ನಲ್ಲಿ ಬರೆದಿದ್ದರು ಎನ್ನಲಾದ ನಕಲಿ ಪತ್ರವನ್ನು ಶಾರದಾ ಅವರು ಸಾಮಾಜಿಕ ಜಾಲತಾಣದಲ್ಲಿ 2019ರ ಏಪ್ರಿಲ್ 16ರಂದು ಪೋಸ್ಟ್ ಮಾಡಿದ್ದಾರೆ’ ಎಂಬ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
‘ನನ್ನ ವಿರುದ್ಧ ಮಾಡಲಾಗಿರುವ ಆರೋಪಗಳಲ್ಲಿ ಹುರುಳಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ–2000ರ ಕಲಂ 66 ‘ಎ’ ಪ್ರಕಾರ ನನ್ನ ವಿರುದ್ಧ ಪ್ರಕರಣ ಹೂಡಲಾಗಿದೆ. ಆದರೆ, ಸುಪ್ರೀಂಕೋರ್ಟ್ ಈ ಕಲಂ ಅನ್ನು 2015ರಲ್ಲಿ ರದ್ದುಗೊಳಿಸಿದೆ. ಹಾಗಾಗಿ ಪ್ರಕರಣ ರದ್ದುಗೊಳಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.