ಬೆಂಗಳೂರು: ರಾಜ್ಯದಲ್ಲಿ ಮೇ 3 ರವರೆಗೆ ಲಾಕ್ಡೌನ್ ನಿರ್ಬಂಧಗಳನ್ನು ಯಥಾಸ್ಥಿತಿ ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಲಾಕ್ಡೌನ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಕೇಂದ್ರ ಮತ್ತೊಮ್ಮೆ ಮಾರ್ಗಸೂಚಿ ಹೊರಡಿಸಿದರೆ ಮುಖ್ಯಮಂತ್ರಿ ಮತ್ತು ಮುಖ್ಯಕಾರ್ಯದರ್ಶಿಯವರು ಮತ್ತೊಮ್ಮೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಮೇ 3 ರವರೆಗೆ ಲಾಕ್ಡೌನ್ ಮುಂದುವರಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಅವರು ಹೇಳಿದರು.
ಆದ್ದರಿಂದ ಐಟಿ–ಬಿಟಿ ಸೇರಿದಂತೆ ಯಾವುದೇ ಉದ್ಯಮಗಳನ್ನೂ ತೆರೆಯುವಂತಿಲ್ಲ. ಗ್ರಾಮೀಣ ಪ್ರದೇಶಗಳಿಗೂ ಅನ್ವಯವಾಗುತ್ತದೆ. ಹಣ್ಣು– ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳ ಸಾಗಣೆಗೆ ಯಾವುದೇ ಅಡ್ಡಿ ಇಲ್ಲ ಎಂದು ಅವರು ಹೇಳಿದರು.
ಸಂಪುಟ ಸಭೆಯ ಪ್ರಮುಖ ನಿರ್ಣಯಗಳು:
* ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಒಂದು ಲಕ್ಷ ಕುಟುಂಬಗಳಿಗೆ ಮೂರು ತಿಂಗಳು ಉಚಿತ ಸಿಲಿಂಡರ್ ವಿತರಣೆ
* ಚಿಕ್ಕಮಗಳೂರಿಗೆ ಮೆಡಿಕಲ್ ಕಾಲೇಜು ಮಂಜೂರು. ಇದಕ್ಕಾಗಿ ₹438 ಕೋಟಿ ಅನುದಾನ ನೀಡಲು ಒಪ್ಪಿಗೆ
* ನದಿ ನೀರಿನ ಹೋರಾಟ, ಕನ್ನಡ ಪರ ಹೋರಾಟ, ಟಿಪ್ಪು ಗಲಭೆ, ಗಣಪತಿ ಹಬ್ಬದ ಸಂದರ್ಭಗಳಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ 152 ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಈ ಹಿಂದೆ 46 ಪ್ರಕರಣಗಳನ್ನು ಕೈಬಿಡಲಾಗಿತ್ತು.
* ಜೀವಾವಧಿ ಶಿಕ್ಷೆಗೆ ಗುರಿಯಾದವರು,14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲು ನಿಯಮಾವಳಿ ಜಾರಿ.
*ರೈತರ ಫಸಲ್ ಭಿಮಾ ಯೋಜನೆಗೆ ರಾಜ್ಯದ ವಂತಿಗೆಯಾಗಿ ₹27.29 ಕೋಟಿ ನೀಡಲು ಒಪ್ಪಿಗೆ