ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರು, ಶ್ರಮಿಕ ವರ್ಗದವರ ಪರ ಸಂಘಟಿತ ಹೋರಾಟ: ವಿರೋಧ ಪಕ್ಷಗಳ ನಿರ್ಣಯ 

Last Updated 30 ಏಪ್ರಿಲ್ 2020, 12:21 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‍ಡೌನ್ನಿಂದಾಗಿ ತೊಂದರೆಗೆ ಸಿಲುಕಿರುವ ರೈತರು, ಶ್ರಮಿಕ ವರ್ಗದವರ ಪರ ಸಂಘಟಿತ ಹೋರಾಟ ನಡೆಸಲು ವಿರೋಧ ಪಕ್ಷಗಳು ನಿರ್ಧರಿಸಿವೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಕೊರೊನಾ ವಿಚಾರದಲ್ಲಿ ವಿರೋಧ ಪಕ್ಷಗಳು ಮೊದಲಿನಿಂದಲೂ ಸರ್ಕಾರಕ್ಕೆ ಸಹಕಾರ ನೀಡುತ್ತಾ ಬಂದಿವೆ. ಆದರೂ ವಿರೋಧ ಪಕ್ಷಗಳು ರೈತರು, ಶ್ರಮಿಕ ವರ್ಗದವರ ಬಗ್ಗೆ ನೀಡುತ್ತಿರುವ ಮನವಿಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಈ ವಿಚಾರದಲ್ಲಿ ನಮ್ಮ ಸಹನೆ ಕೆಣಕಬೇಡಿ ಎಂದು ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್, ಸಿಪಿಎಂ, ಸಿಪಿಐ ಹಾಗೂ ರೈತ ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ವಿವರಿಸಿದರು.
ರಾಜ್ಯದಲ್ಲಿ ಕಳೆದ ನಲವತ್ತು ದಿನಗಳಿಂದ ಲಾಕ್‍ಡೌನ್ ಜಾರಿಯಲ್ಲಿದೆ. ಇದರಿಂದಾಗಿ ರೈತರು ಭಾರಿ ತೊಂದರೆಗೆ ಒಳಗಾಗಿದ್ದಾರೆ. ಈ ಕುರಿತು ಇಂದಿನ ಸಭೆಯಲ್ಲಿ ನಾಲ್ಕು ಗಂಟೆಗಳ ಕಾಲ ಚರ್ಚೆ ನಡೆಸಿದ್ದೇವೆ. ರೈತರ ಜೊತೆಗೆ ವಿವಿಧ ವಲಯಗಳ ಕಾರ್ಮಿಕರು, ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿ ಜೀವನ ನಡೆಸುತ್ತಿರುವ ವಿವಿಧ ಸಮುದಾಯಗಳವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು ಎಂದರು.

ಸಭೆಯಲ್ಲಿ ಇಂದು ನಡೆದ ಚರ್ಚೆಯನ್ನು ಆಧರಿಸಿ ಮೊದಲು ಬೇಡಿಕೆಗಳ ಪಟ್ಟಿಯೊಂದನ್ನು ಸಿದ್ಧಪಡಿಸಲಾಗುವುದು. ಬಳಿಕ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಕಿವಿಗೊಡದಿದ್ದರೆ ವಿರೋಧ ಪಕ್ಷಗಳು ಒಟ್ಟಾಗಿ ಬೀದಿಗಿಳಿಯುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಇದು ಚುನಾವಣಾ ರಾಜಕೀಯವಲ್ಲ. ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಗುರಿಯಾಗಿರುವ ರೈತರು, ಶ್ರಮಿಕ ವರ್ಗದವರ ನೆರವಿಗೆ ಸರ್ಕಾರ ಧಾವಿಸಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ ಒಟ್ಟಾಗಿ ಹೋರಾಟ ನಡೆಸಲು ನಾವೆಲ್ಲ ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಸರ್ವಪಕ್ಷ ನಾಯಕರ ಸಭೆ ಕರೆದಾಗ, ಕಾಂಗ್ರೆಸ್ ಪಕ್ಷ ನಿಯೋಗದಲ್ಲಿ ಹೋಗಿ ಭೇಟಿ ಮಾಡಿದಾಗ ಸಲ್ಲಿಸಿದ ಮನವಿಗಳು ಹಾಗೂ ನೀಡಿದ ಸಲಹೆ, ಸೂಚನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಸಂಕಷ್ಟದಲ್ಲಿರುವವರಿಗೆ ನೆರವಾಗುವ ಬಗ್ಗೆ ಆಲೋಚನೆ ಮಾಡಿಲ್ಲ. ಈಗ ವಿರೋಧ ಪಕ್ಷಗಳು ಒಂದಾಗಿ ನೀಡುವ ಮನವಿ ಪತ್ರವನ್ನಾದರೂ ನಿಗದಿತ ಅವಧಿಯೊಳಗೆ ಕಾರ್ಯರೂಪಕ್ಕೆ ತರುವ ಕೆಲಸವನ್ನು ಸರ್ಕಾರ ಮಾಡಬೇಕು.

ರಾಜ್ಯದ ಜನತೆಯ ಹಿತದೃಷ್ಟಿಯಿಂದ ಇದುವರೆಗೆ ನಾವು ಸರ್ಕಾರಕ್ಕೆ ಸಹಕಾರ ನೀಡುತ್ತಾ ಬಂದಿದ್ದೇವೆ. ಎಲ್ಲಿಯೂ ರಾಜಕೀಯ ಮಾಡಿಲ್ಲ. ಈಗಲೂ ಆ ಉದ್ದೇಶ ಇಲ್ಲ. ಸಂಕಷ್ಟದಲ್ಲಿರುವವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂಬ ಕಾರಣಕ್ಕೆ ಈ ಸಭೆ ಕರೆದು ಚರ್ಚೆ ನಡೆಸಿದ್ದೇವೆ.

ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಸುಮ್ಮನೆ ಕೂರುವಂತಿಲ್ಲ. ಕೇರಳ ಸರ್ಕಾರ ಕೊರೊನಾ ನಿಯಂತ್ರಣಕ್ಕೆ 20 ಸಾವಿರ ಕೋಟಿ ರೂ. ವೆಚ್ಚ ಮಾಡಿಲ್ಲವೇ? ಒಂದು ವೇಳೆ ಹಣಕಾಸು ತೊಂದರೆ ಇದ್ದಲ್ಲಿ ರಾಜ್ಯ ಸರ್ಕಾರ ಕೇಂದ್ರದ ನೆರವು ಕೋರಲಿ ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT