ಬೆಂಗಳೂರು: ‘ಹೈಕೋರ್ಟ್ ಜಾರಿ ಮಾಡಿರುವ ಸಮನ್ಸ್ ಈತನಕ ಸಂಸದ ಪ್ರಜ್ವಲ್ ರೇವಣ್ಣ ಅವರ ಕೈಸೇರಿಲ್ಲ' ಎಂಬ ಕಾರಣಕ್ಕೆ ಅತೃಪ್ತಿ ವ್ಯಕ್ತಪಡಿಸಿರುವ ಹೈಕೋರ್ಟ್, ‘ಒಬ್ಬ ಸಂಸದರಿಗೆ ವಿಳಾಸವಿಲ್ಲ ಎಂದರೆ ಹೇಗೆ’ ಎಂದು ಪ್ರಶ್ನಿಸಿದೆ.
‘ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಮತ್ತು ಜಿ.ದೇವರಾಜೇಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಸಮನ್ಸ್ ಜಾರಿಯಾಗಿರುವ ಸಂಬಂಧ ಪತ್ರಿಕೆಯಲ್ಲಿ ಪ್ರಕಟಣೆ ನೀಡಲು ಅರ್ಜಿದಾರರಿಗೆ ಅನುಮತಿ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ. ಈ ಹಿಂದಿನ ವಿಚಾರಣೆ ವೇಳೆ, ‘ಸಂಸದರ ವಿಳಾಸಕ್ಕೇ ಸಮನ್ಸ್ ಜಾರಿಯಾಗಿಲ್ಲ ಎಂದಾದರೆ ಬೇರೆಯವರ ಪಾಡೇನು’ ಎಂದು ನ್ಯಾಯಪೀಠ ಆಶ್ಚರ್ಯ ವ್ಯಕ್ತಪಡಿಸಿತ್ತು.
‘ಪ್ರಜ್ವಲ್ ರೇವಣ್ಣ ತಮ್ಮ ಆದಾಯ ತೆರಿಗೆ ಸಲ್ಲಿಕೆ ಮತ್ತು ಬ್ಯಾಂಕ್ ಖಾತೆಯ ವಿವರಗಳಿಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ದಾಖಲೆ ಸುಳ್ಳು ಅಂಕಿ ಅಂಶಗಳಿಂದ ಕೂಡಿವೆ’ ಎಂಬುದು ಅರ್ಜಿದಾರರ ತಕರಾರು.