ಬೆಂಗಳೂರು: ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ಅನ್ವರ್ ಮಾಣಿಪ್ಪಾಡಿ ವರದಿಯನ್ನು ಆಧರಿಸಿ ಲೋಕಾಯುಕ್ತ ಸಂಸ್ಥೆಯು ತನಿಖೆ ಕೈಗೊಂಡು ಸಲ್ಲಿಸಿರುವ ಮಧ್ಯಂತರ ವರದಿಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ವಕ್ಫ್ ಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ನಿರ್ದೇಶನ ನೀಡಿದರು.
ವಕ್ಫ್ ಆಸ್ತಿಗಳ ದುರ್ಬಳಕೆ ಮತ್ತು ಒತ್ತುವರಿ ಕುರಿತು ಹಿಂದೆ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅನ್ವರ್ ಮಾಣಿಪ್ಪಾಡಿ ವರದಿ ನೀಡಿದ್ದರು. ಇದರ ತನಿಖೆ ಉಸ್ತುವಾರಿಯನ್ನು ಲೋಕಾಯುಕ್ತರಿಗೆ ಒಪ್ಪಿಸಿದ್ದು, ಲೋಕಾಯುಕ್ತ ಮಧ್ಯಂತರ ವರದಿ ನೀಡಿತ್ತು. ಸಚಿವ ಸಂಪುಟವು ಇದಕ್ಕೆ ಅನುಮೋದನೆ ನೀಡಿತ್ತು.