ಹುಬ್ಬಳ್ಳಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ಮಹದಾಯಿ ನದಿ ನೀರನ್ನು ಮಲಪ್ರಭೆಗೆ ಹರಿಸುವ ಕಳಸಾ ಬಂಡೂರಿ ನಾಲಾ ಜೋಡಣೆ ಯೋಜನೆ ಕುರಿತು ಚರ್ಚಿಸಲು ಮೊದಲ ಬಾರಿಗೆ ನಡೆದ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಸರ್ವಪಕ್ಷಗಳ ಜನಪ್ರತಿನಿಧಿಗಳ ಸಭೆಯ ನಂತರ ಮಾತನಾಡಿದರು.
‘ಅಂತರ ರಾಜ್ಯಗಳ ನದಿ ವಿವಾದ ಇದು. ನಮ್ಮ ನಡೆ ಮತ್ತೊಂದು ಸಮಸ್ಯೆಗೆ ಕಾರಣವಾಗದಂತೆ ಮುಂದಿನ ಹೆಜ್ಜೆ ಇಡಬೇಕಾಗಿದೆ. ಆದ್ದರಿಂದ ಕಾನೂನು ತಜ್ಞರ ಸಲಹೆ ಪಡೆಯಲುಮೊದಲ ಸಭೆ ಯಲ್ಲಿ ನಿರ್ಧರಿಸಲಾಯಿತು’ ಎಂದು ಸಭೆಯ ಬಳಿಕವಿವರಿಸಿದರು.
‘ಈ ಭಾಗದ ಜನರ ಹಿತಾಸಕ್ತಿ ಕಾಪಾಡಲು ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಒಂದಾಗಿ ಸಭೆ ಮಾಡುವ ಅಗತ್ಯವಿತ್ತು. ಈ ನಿಟ್ಟಿನಲ್ಲಿ ಈಗ ಮೊದಲ ಪ್ರಯತ್ನ ಯಶಸ್ವಿಯಾಗಿದೆ. ಸಲಹೆ ಪಡೆದ ಬಳಿಕ ಎಲ್ಲ ಜನಪ್ರತಿನಿಧಿಗಳು ಸೇರಿ ಮತ್ತೊಮ್ಮೆ ಸಮಾಲೋಚಿಸುತ್ತೇವೆ’ ಎಂದು ಹೇಳಿದರು.
ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಾದಧಾರವಾಡ, ಗದಗ, ಬಾಗಲಕೋಟೆ ಮತ್ತು ಬೆಳಗಾವಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಬಹಳಷ್ಟು ಜನಪ್ರತಿನಿಧಿಗಳು ಗೈರು ಹಾಜರಾಗಿದ್ದರು.