ಮಂಡ್ಯ: 'ಎಬಿವಿಪಿ ಕಾರ್ಯಕರ್ತನಾಗಿದ್ದ ನಾನು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಮೆಚ್ಚಿ ಬಿಜೆಪಿ ಅಭ್ಯರ್ಥಿಯಾಗಿದ್ದೇನೆ. ನಾನು ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ' ಎಂದು ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ರಾಮನಗರ ಮಾದರಿಯಲ್ಲಿ ಮಂಡ್ಯ ಬಿಜೆಪಿ ಅಭ್ಯರ್ಥಿಯೂ ಕಣದಿಂದ ಹಿಂದೆ ಸರಿಯುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಡಾ.ಸಿದ್ದರಾಮಯ್ಯ ಈ ಸ್ಪಷ್ಟನೆ ನೀಡಿದರು.
'ನಾನು ಯಾರಿಗೂ ಮಾರಾಟವಾಗುವುದಿಲ್ಲ. ನಾನು ಚುನಾವಣೆಯಲ್ಲಿ ಸೋತರೆ ಮನೆಗೆ ತೆರಳುತ್ತೇನೆ. ನನಗೆ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ. ಆರ್.ಅಶೋಕ್ ಅವರ ನೇತೃತ್ವದಲ್ಲಿ ಪ್ರಚಾರ ನಡೆಯುತ್ತಿದೆ' ಎಂದರು.
'ಬಿ.ಎಸ್.ಯಡಿಯೂರಪ್ಪ ಅವರ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಆದರೆ ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡಿತ್ತಿರುವುದು ನೋವು ತಂದಿದೆ' ಎಂದರು.