ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಮನೂರು ಕೊಳಕು ವ್ಯಕ್ತಿತ್ವ ಪ್ರದರ್ಶನ: ಎಂ.ಬಿ.ಪಾಟೀಲ ಕಿಡಿ

ಅಕ್ರಮ ಹಣದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಹೇಳಿಕೆಗೆ ತೀವ್ರ ವಿರೋಧ
Last Updated 13 ಜನವರಿ 2019, 19:02 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟವು ಅಕ್ರಮ, ಲಂಚದ ಹಣದಲ್ಲಿ ನಡೆದಿದೆ' ಎಂಬ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಗೃಹ ಸಚಿವ ಎಂ.ಬಿ.ಪಾಟೀಲ ತೀವ್ರ ವಿರೋಧ ವ್ಯಕ್ತಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟವು ಸಮಾಜದ ಜನತೆಯ ಅಸ್ಮಿತೆಯ ಹೋರಾಟವಾಗಿದೆ. ಇದು ಯಾವುದೇ ರಾಜಕೀಯ ಪ್ರೇರಿತ ಹೋರಾಟವಲ್ಲ. ಇಂತಹ ಹೇಳಿಕೆ ನೀಡುವ ಮೂಲಕ ಶಾಮನೂರು ಅವರು ತಮ್ಮ ಕೊಳಕು ವ್ಯಕ್ತಿತ್ವ ಪ್ರದರ್ಶನ ಮಾಡಿದ್ದಾರೆ’ ಎಂದರು.

‘ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಭಾಗವಹಿಸಿದ್ದ ವಿನಯ ಕುಲಕರ್ಣಿ, ಶರಣ ಪ್ರಕಾಶ ಪಾಟೀಲ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ’ ಎಂದು ಶಾಮನೂರು ಹೇಳಿಕೆ ನೀಡಿದ್ದಾರೆ. ಹಾಗಾದರೆ, ಇವರ ಮಗ ಮಲ್ಲಿಕಾರ್ಜುನ ಯಾವ ಕಾರಣಕ್ಕಾಗಿ ಸೋತರು? ಇವರ ವೀರಶೈವ ಬಲ ಎಲ್ಲಿ ಹೋಗಿತ್ತು? ಎಂದು ಪ್ರಶ್ನಿಸಿದರು.

‘ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಬಗ್ಗೆ ಹಾಗೂ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡುವುದನ್ನು ಶಾಮನೂರು ನಿಲ್ಲಿಸದಿದ್ದರೆ ಅವರ ವಿರುದ್ಧ ಮಾತನಾಡಲು ನಾವು ಹಿಂಜರಿಯುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು. ‘ದಾವಣಗೆರೆ ಬಾಪೂಜಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದ ಕೊಟ್ಟೂರು ಬಸಪ್ಪ ವಿದೇಶಕ್ಕೆ ಹೋಗಿದ್ದಾಗ ಮೋಸದಿಂದ ಶಾಮನೂರು ಅದರ ಅಧ್ಯಕ್ಷರಾಗಿರುವುದು ನಮಗೂ ತಿಳಿದಿದೆ’ ಎಂದು ಕುಟುಕಿದರು.

‘ಶಾಮನೂರು ಅವರಿಗೆ ರಾಜಕೀಯವಾಗಿ ನನ್ನ ಬೆಳವಣಿಗೆ ಸಹಿಸಲಾಗುತ್ತಿಲ್ಲ. ಸಂಕುಚಿತ ಮನೋಭಾವದ ಅವರಿಗೆ ನನ್ನ ಬಗ್ಗೆ ಅಸೂಹೆ, ಹೊಟ್ಟೆಕಿಚ್ಚು ಹೆಚ್ಚಾಗಿದೆ. ನನ್ನ ಬಗ್ಗೆ ಕೀಳಾಗಿ ಮಾತನಾಡುವುದನ್ನು ಬಿಟ್ಟು ಹಾರೈಸುವ ಕೆಲಸ ಮಾಡಬೇಕಾಗಿತ್ತು. ಇಂತಹ ಹೇಳಿಕೆ ನೀಡುವುದರಿಂದ ಅವರಿಗೆ ಶೋಭೆ ತರುವುದಿಲ್ಲ’ ಎಂದರು.

‘ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಸಂಬಂಧಿಸಿದಂತೆ ಗೃಹ ಸಚಿವನಾಗಿ ನಾನು ನನ್ನ ಅಧಿಕಾರಿ ದುರುಪಯೋಗ ಮಾಡಿಕೊಳ್ಳುವುದಾಗಲಿ, ಪ್ರಭಾವ ಬೀರುವುದಾಗಲಿ ಎಂದಿಗೂ ಮಾಡುವುದಿಲ್ಲ’ ಎಂದರು. ‘ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸಮಾಜದ ಮುಖಂಡರು ಇನ್ನು ಮುಂದೆ ಕಾನೂನಾತ್ಮಕ ಹೋರಾಟ ನಡೆಸಲಿದ್ದಾರೆ’ ಎಂದು ಅವರು ಹೇಳಿದರು.

ಘರ್ಷಣೆಗೆ ಅವಕಾಶ ಬೇಡ:‘ಶಾಮನೂರು ಶಿವಶಂಕರಪ್ಪ ಹಿರಿಯರಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ವಿಷಯದಲ್ಲಿ ಈ ರೀತಿ ಮಾತನಾಡಬಾರದು. ಅನಗತ್ಯ ಘರ್ಷಣೆಗೆ ಅವಕಾಶ ಮಾಡಿಕೊಡಬಾರದು’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೋರಾಟದ ಮುಂಚೂಣಿಯಲ್ಲಿದ್ದ ಗೃಹ ಸಚಿವ ಎಂ.ಬಿ.ಪಾಟೀಲ ಸೇರಿದಂತೆ ಪ್ರಮುಖರ ಬಗ್ಗೆ ವೈಯಕ್ತಿಕ ಟೀಕೆ ಮಾಡುವುದು ಸರಿಯಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT