ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು,ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ತಕ್ಷಣ ಕರೆಯುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಇಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ, ಪರಿಶೀಲನೆ ಕುರಿತು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರೊಂದಿಗೆ ನಡೆಸಿದ ಚರ್ಚೆಯ ವೇಳೆ ಅವರು ಈ ಸೂಚನೆ ನೀಡಿದರು.
‘ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ, ಬಜೆಟ್ನಲ್ಲಿಘೋಷಿಸಿದ ಕಾರ್ಯಕ್ರಮಗಳನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗಿದ್ದರೆ, ನಿಧಾನವಾಗುತ್ತಿದ್ದರೆ, ಇದಕ್ಕೆ ಕಾರಣಗಳನ್ನು ಅರಿಯಬೇಕು’ ಎಂದು ಅವರು ತಾಕೀತು ಮಾಡಿದರು.
‘ಶಿಕ್ಷಣ, ಆರೋಗ್ಯ ಹಾಗೂ ವಸತಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಗುಣಮಟ್ಟ ಖಾತರಿಪಡಿಸಲು ಹಾಗೂ ಶಾಲಾ ಕಾಲೇಜುಗಳ ಮೂಲಸೌಕರ್ಯಕ್ಕೆ ಗಮನ ಕೊಡಬೇಕು. ಈಗಾಗಲೇ ಆರಂಭಿಸಲಾದ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ದೊರಕುವಂತೆ ಖಾತರಿಪಡಿಸಬೇಕು’ ಎಂದು ಸೂಚಿಸಿದರು.
ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ದೊರಕಲೇಬೇಕು ಎಂದ ಅವರು, ಅರ್ಹ ಫಲಾನುಭವಿಗಳಿಗೆ ವಸತಿ ಯೊಜನೆಗಳು ದೊರಕಬೇಕು ಎಂದರು.
ನಗರ ಪ್ರದೇಶಗಳಲ್ಲಿಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.