ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ‘ನೀರಾವರಿ ಕ್ಷೇತ್ರದ ಮೇಲೆ ರಾಜ್ಯ ಸರ್ಕಾರ ಹಲವು ದಶಕಗಳಿಂದ ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿದೆ. ಅಣೆಕಟ್ಟುಗಳನ್ನು ನಿರ್ಮಿಸಿದೆ. ರೈತರಿಗೆ ಸೌಲಭ್ಯಗಳನ್ನು ಕೊಟ್ಟಿದ್ದೇವೆ. ಅಂತಹ ಜಮೀನುಗಳನ್ನು ಹಣವಂತರು ಖರೀದಿ ಮಾಡಿ ಬೇರೆ ಉದ್ದೇಶಗಳಿಗೆ ಬಳಸಿದರೆ ಅದರಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತದೆ. ನೀರಾವರಿಗಾಗಿ ಹಣ ಹೂಡಿದ ಉದ್ದೇಶವೇ ವಿಫಲವಾಗುತ್ತದೆ. ಆದ್ದರಿಂದ ಕೊಡಬಾರದು ಎಂದು ತೀರ್ಮಾನ ಮಾಡಿದ್ದೇವೆ’ ಎಂದರು.