ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರನ್ನಾಗಿ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಮಂಡಳಿಯ ಅಧ್ಯಕ್ಷ ಸಿ.ಜಯರಾಂ ಅವರು ಗುರುವಾರ ಬೆಳಿಗ್ಗೆ ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕೆ. ಸುಧಾಕರ್ ಅವರನ್ನು ನೇಮಕ ಮಾಡಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನಾಲ್ಕು ತಿಂಗಳ ಹಿಂದೆ ಶಿಫಾರಸು ಮಾಡಿದ್ದರು. ತಜ್ಞರನ್ನಷ್ಟೇ ಮಂಡಳಿಗೆ ನೇಮಕ ಮಾಡಬೇಕು ಎಂಬ ಕಾರಣ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸುಧಾಕರ್ ನೇಮಕಕ್ಕೆ ಒಪ್ಪಿರಲಿಲ್ಲ.
ಈ ವರ್ಷ ಫೆಬ್ರುವರಿ 28ರಂದು ಸೇವೆಯಿಂದ ನಿವೃತ್ತರಾಗಿದ್ದ ಐಎಫ್ಎಸ್ ಅಧಿಕಾರಿ ಸಿ. ಜಯರಾಮ್ ಅವರನ್ನು ಈ ಹುದ್ದೆಗೆ ನೇಮಿಸಿದ್ದರು.ಈ ವಿಚಾರ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು.
ಇದರಿಂದ ಅಸಮಾಧಾನಗೊಂಡಿದ್ದ ಸುಧಾಕರ್ ಅವರು ಮೈತ್ರಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಬಹಿರಂಗವಾಗಿಯೇ ಟೀಕೆ ಮಾಡಿದ್ದರು.