ಅರಕಲಗೂಡು: ‘ಎಲ್ಲ ಚುನಾವಣೆಗಳಲ್ಲಿ ಹಣ ಖರ್ಚಾಗುತ್ತದೆ. ಯಾವ ಚುನಾವಣೆಯಲ್ಲಿ ಹಣದ ಹೊಳೆ ಹರಿದಿಲ್ಲ ಎಂಬುದನ್ನು ಎಚ್.ಡಿ.ರೇವಣ್ಣ ತಿಳಿಸಲಿ’ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಶುಕ್ರವಾರ ಇಲ್ಲಿ ಸವಾಲು ಹಾಕಿದರು.
ಬಿಜೆಪಿಯವರು ಉಪಚುನಾವಣೆಗೆ ₹ 750 ಕೋಟಿ ಖರ್ಚು ಮಾಡಿದ್ದಾರೆ ಎಂಬ ಜೆಡಿಎಸ್ ಶಾಸಕ ರೇವಣ್ಣ ಆರೋಪಕ್ಕೆ ತಿರುಗೇಟು ನೀಡಿದ ಅವರು, ‘ಚುನಾವಣೆಯಲ್ಲಿ ನಾವು ಗೆದ್ದಿರುವುದನ್ನು ಅವರು ಒಪ್ಪಿಕೊಳ್ಳಬೇಕು’ ಎಂದು ಕುಟುಕಿದರು.
‘ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ ಆಶ್ವಾಸನೆಯಂತೆ ನೂತನ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ. ಈ ಕುರಿತು ಐದಾರು ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ಕಲ್ಪಿಸುವ ಕುರಿತು ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದರು.
‘ಸರ್ಕಾರಕ್ಕೆ, 100 ದಿನಗಳಲ್ಲಿ ಉತ್ತಮ ಕೆಲಸ ಮಾಡಲು ಸಾಧ್ಯವಾಗಿರಲಿಲ್ಲ. ಈಗ ರಾಜ್ಯದಲ್ಲಿ ಸ್ಥಿರ ಸರ್ಕಾರವಿದ್ದು, ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಕೇಂದ್ರ ಸರ್ಕಾರ ಕೂಡ ಅನುದಾನ ಒದಗಿಸುವಲ್ಲಿ ಯಾವುದೇ ತಾರತಮ್ಯ ಎಸಗುತ್ತಿಲ್ಲ’ ಎಂದರು.