ಬೆಳಗಾವಿ: ‘ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಗೆ ಹೋಗಿ ಬಂದವರಿಂದ ಜಿಲ್ಲೆಗೆ ಹೆಚ್ಚಿನ ಪರಿಣಾಮವಾಗಿದೆ. ಇಲ್ಲದಿದ್ದರೆ ಕೊರೊನಾ ವೈರಾಣು ವಿಷಯದಲ್ಲಿ ಬೆಳಗಾವಿಯು ಗ್ರೀನ್ ಝೋನ್ನಲ್ಲಿ ಇರುತ್ತಿತ್ತು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು ಎಲ್ಲ ರೀತಿಯಿಂದಲೂ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಎಲ್ಲರೂ ಸಹಕರಿಸಬೇಕು’ ಎಂದರು.
‘ರಾಯಬಾಗ ತಾಲ್ಲೂಕಿನ ಕುಡಚಿ ಮತ್ತು ತಾಲ್ಲೂಕಿನ ಹಿರೇಬಾಗೇವಾಡಿಯಲ್ಲೇ 32 ಕೋವಿಡ್–19 ಪ್ರಕರಣಗಳಿವೆ. ಅಲ್ಲಿ ತಲಾ ನಾಲ್ಕು ಕುಟುಂಬಗಳಲ್ಲೇ ಕೊರೊನಾ ಸೋಂಕು ಸೀಮಿತವಾಗಿದೆ. ಅದನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ಪ್ರಕರಣ ಕಾಣಿಸಿಕೊಂಡಿಲ್ಲ’ ಎಂದು ತಿಳಿಸಿದರು.
‘ಹುಬ್ಬಳ್ಳಿ–ಧಾರವಾಡದಲ್ಲೂ ದೆಹಲಿಗೆ ಹೋಗಿ ಬಂದವರಿಂದಲೆ ಕೊರೊನಾ ಸೋಂಕು ಹೆಚ್ಚಾಗಿದೆ’ ಎಂದು ಪ್ರತಿಕ್ರಿಯಿಸಿದರು.