ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಮನೋಜ್ ರಾಜನ್ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಡಿ.ಲಿಟ್ ಪದವಿ ಪ್ರದಾನ ಮಾಡಿದೆ.
ಮನೋಜ್ ಅವರು ‘ದೇಶದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗಳ ಸುಧಾರಣೆ ಮತ್ತು ತಂತ್ರಜ್ಞಾನದ ಪಾತ್ರ’ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ವಿಶ್ವವಿದ್ಯಾಲಯ ಡಿ.ಲಿಟ್ ಪದವಿ ನೀಡಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಪದವೀಧರರಾಗಿರುವ ಮನೋಜ್, ಕೃಷಿ ಉತ್ಪನ್ನ ವಹಿವಾಟು, ಮಾರುಕಟ್ಟೆ ಸುಧಾರಣೆ ಮತ್ತುತಂತ್ರಜ್ಞಾನ ಬಳಕೆಯಲ್ಲಿ ಪರಿಣತಿ ಸಾಧಿಸಿದ್ದಾರೆ.
ಸದ್ಯ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಆಯುಕ್ತರಾಗಿರುವ ಅವರು, ಕೊರೊನಾ ಸೋಂಕು ನಿಯಂತ್ರಣ ಕೆಲಸದಲ್ಲಿ ತೊಡಗಿದ್ದಾರೆ.
ಸಹಕಾರ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಸಮಯದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ (ಎಪಿಎಂಸಿ) ಏಕೀಕೃತ ಮಾರುಕಟ್ಟೆ ವ್ಯವಸ್ಥೆಯಂತಹ ಕ್ರಾಂತಿಕಾರಿ ಬದಲಾವಣೆ ತರುವಲ್ಲಿ ಮನೋಜ್ ರಾಜನ್ ಪ್ರಮುಖ ಪಾತ್ರವಹಿಸಿದ್ದಾರೆ. ನಂತರ ಈ ಮಾದರಿಯನ್ನು ಕೇಂದ್ರ ಮತ್ತು ಇತರ ರಾಜ್ಯಗಳು ಇ–ಮಂಡಿ ಹೆಸರಿನಲ್ಲಿ ಜಾರಿಗೆ ತಂದಿವೆ.