ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಹೊಸ ನಿಯಮ

ವರದಿ ಸಿದ್ಧಪಡಿಸಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ
Last Updated 25 ಫೆಬ್ರುವರಿ 2019, 19:22 IST
ಅಕ್ಷರ ಗಾತ್ರ

ಬೆಂಗಳೂರು: ಫೇಸ್‌ಬುಕ್‌, ಟ್ವಿಟರ್‌ನಂಥ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಅವಹೇಳನಕಾರಿ ಪೋಸ್ಟ್ ಹಾಗೂ ಸುಳ್ಳು ಸುದ್ದಿ ಹರಿಬಿಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೊಸ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ನಗರದಲ್ಲಿ ಸೋಮವಾರ ನಡೆದ ‘ರಾಜ್ಯದ ಪೊಲೀಸ್ ಹಿರಿಯ ಅಧಿಕಾರಿಗಳ ವಾರ್ಷಿಕ ಸಮಾವೇಶ’ದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ‘ಕೆಲವರು ಮನಸ್ಸಿಗೆ ಬಂದಂತೆ ಅವಹೇಳನಕಾರಿ ಪೋಸ್ಟ್ ಹಾಗೂ ಕಮೆಂಟ್‌ ಪ್ರಕಟಿಸುತ್ತಿದ್ದಾರೆ. ಇಂಥ ನಡವಳಿಕೆಯನ್ನು ಹತ್ತಿಕ್ಕಲು ಹೊಸ ನಿಯಮ ರೂಪಿಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಆ ಬಗ್ಗೆ ವರದಿ ಸಿದ್ಧಪಡಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

‘ಸೈಬರ್ ಕ್ರೈಂ ಅಪರಾಧಗಳ ಸಂಖ್ಯೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಅವುಗಳ ತಡೆಗೆ ಉತ್ತಮ ರೀತಿಯಲ್ಲಿ ಕೆಲಸ ಮಾಡುವಂತೆ ಪೊಲೀಸರಿಗೆ ಹೇಳಿದ್ದೇನೆ‍’ ಎಂದರು.

ಲೋಪದೋಷ ಸರಿಪಡಿಸಲು ಕ್ರಮ: ಪೊಲೀಸ್ ಇಲಾಖೆಯಲ್ಲಿ ಕೆಲ ಲೋಪದೋಷಗಳಿರುವುದು ಗಮನಕ್ಕೆ ಬಂದಿದೆ. ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಕುಮಾರಸ್ವಾಮಿ ಹೇಳಿದರು.

‘ಜನರು ಯಾವುದೇ ಭಯವಿಲ್ಲದೇ ಧೈರ್ಯವಾಗಿ ಠಾಣೆಗೆ ಬಂದು ದೂರು ನೀಡಬೇಕು. ಅಂಥ ಜನಸ್ನೇಹಿ ವಾತಾವರಣ ನಿರ್ಮಿಸುವ ಉದ್ದೇಶದಿಂದ ಠಾಣೆಯ ಸಹಾಯವಾಣಿ ಘಟಕಗಳನ್ನು ಮೇಲ್ದರ್ಜೇಗೇರಿಸಲು ಕ್ರಮ ಕೈಗೊಳ್ಳಲಾಗಿದೆ’.

‘ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಬರಲಿದ್ದು, ಪೊಲೀಸ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಲಿದೆ. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಚುನಾವಣೆಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.

‌ಏರ್ ಶೋ ಅನುಮಾನ ಬೇಡ: ‘ಮುಂದಿನ ಬಾರಿ ಬೆಂಗಳೂರಿನಲ್ಲಿ ಏರ್‌ಶೋ ನಡೆಯುತ್ತಾ’ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ‘ಏಕೆ ಅನುಮಾನವೇ?. ಚೆನ್ನೈನಲ್ಲೂ 200 ಕಾರುಗಳು ಸುಟ್ಟಿವೆ. ಕೆಲವು ಬಾರಿ ಇಂಥ ಘಟನೆಗಳು ನಡೆಯುತ್ತವೆ. ಮುಂದಿನ ವರ್ಷ ಬೆಂಗಳೂರಿನಲ್ಲೇ ಏರ್‌ಶೋ ನಡೆಯುತ್ತದೆ. ಅನುಮಾನ ಬೇಡ’ ಎಂದರು.

ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿ: ‘ಭೂಗತ ಪಾತಕಿ ರವಿ ಪೂಜಾರಿಯನ್ನು ಸೆನೆಗಲ್ ಪೊಲೀಸರು ಬಂಧಿಸಿದ್ದಾರೆ. ಆತನನ್ನು ನಮ್ಮ ವಶಕ್ಕೆ ಪಡೆಯಲು ಅಗತ್ಯವಿರುವ ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದೆ’ ಎಂದು ಕುಮಾರಸ್ವಾಮಿ ಹೇಳಿದರು.

ಮುಂದಿನ ವರ್ಷ ಪದಕ ಕೊಡಿಸೋಣ: ಈ ಬಾರಿ ಗಣರಾಜ್ಯೋತ್ಸವದಂದು ರಾಜ್ಯದ ಅರ್ಹ ಪೊಲೀಸರಿಗೆ ರಾಷ್ಟ್ರಪತಿ ಪದಕ ಸಿಗದಿರುವುದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಮುಂದಿನ ವರ್ಷ ಎಲ್ಲರಿಗೂ ಪದಕ ಕೊಡಿಸೋಣ’ ಎಂದರು.

‘ಎರಡು ವರ್ಷಕ್ಕೊಮ್ಮೆ ವರ್ಗಾವಣೆ’
ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸಂಬಂಧ ಸಮಾವೇಶದಲ್ಲಿ ವಿಷಯ ಪ್ರಸ್ತಾಪಿಸಿದ ಗೃಹ ಸಚಿವ ಎಂ.ಬಿ.ಪಾಟೀಲ, ‘ಕೆಲವು ಅಧಿಕಾರಿಗಳು ಒಂದೇ ಠಾಣೆಯಲ್ಲಿ ಹಾಗೂ ಎಕ್ಸಿಕ್ಯುಟಿವ್ ಹುದ್ದೆಯಲ್ಲೇ ಹಲವು ವರ್ಷ ಕೆಲಸ ಮಾಡುತ್ತಿದ್ದಾರೆ. ಅವರನ್ನು ನಾನ್ ಎಕ್ಸಿಕ್ಯುಟಿವ್ ಹುದ್ದೆಗೆ ನಿಯೋಜಿಸಬೇಕು’ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ, ‘ಪೊಲೀಸ್ ಇಲಾಖೆಯಲ್ಲಿ ಪಿಎಸ್‌ಐನಿಂದ ಹಿಡಿದು ಐಪಿಎಸ್‌ವರೆಗಿನ ಅಧಿಕಾರಿಗಳನ್ನು ಎರಡು ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ನಿಯಮ ರೂಪಿಸಿ’ ಎಂದು ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರಿಗೆ ಸೂಚನೆ ನೀಡಿದರು.

‘ರಾಜ್ಯದಲ್ಲಿಅಕ್ರಮ ಮರಳು ದಂಧೆ ತೆರೆಮರೆಯಲ್ಲಿ ನಡೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕಿ.ಅಪಘಾತದಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪಘಾತಗಳ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT