ಬೆಂಗಳೂರು: ‘ಪದವಿ ಕಾಲೇಜುಗಳ ಪ್ರಾಧ್ಯಾಪಕರ ವರ್ಗಾವಣೆಗೆ ಈಗಿರುವ ಕಾನೂನು ರದ್ದುಗೊಳಿಸಿ, ಹೊಸ ನಿಯಮಗಳನ್ನು ರೂಪಿಸಲಾಗುವುದು. ಅದನ್ನು ಈ ವರ್ಷದಿಂದಲೇ ಜಾರಿಗೆ ತರಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರೊಂದಿಗೆ ಗುರುವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಕಳೆದ 3-4 ವರ್ಷಗಳಿಂದ ಪ್ರಾಧ್ಯಾಪಕರ ವರ್ಗಾವಣೆ ಆಗಿಲ್ಲ.ಹಾಗಾಗಿ ಈ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ಹೊಸ ನಿಯಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.
ವರ್ಗಾವಣೆ ಕುರಿತು ಕರಡು ನಿಯಮರೂಪಿಸಿ ಪ್ರಾಧ್ಯಾಪಕರ ಸಂಘದವರಿಗೆ ಮತ್ತು ಸಂಬಂಧಪಟ್ಟ ಎಲ್ಲರಿಗೂಕಳುಹಿಸಿ, ಸಲಹೆಗಳನ್ನು ಪಡೆಯಲಾಗುವುದು. ನಂತರ ಕಾನೂನು ತಿದ್ದುಪಡಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.