ಬೆಂಗಳೂರು: ವಿಧಾನಸಭೆಯಿಂದ ಪರಿಷತ್ನ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ‘ನಮಗೆ ಬಹುಮತ ಇಲ್ಲದ ಕಾರಣಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ’ ಎಂದು ಹೇಳಿದರು.
‘ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ನನಗೆ ಹೈಕಮಾಂಡ್ ಹೇಳಿಲ್ಲ. ವಿಳಂಬ ಮಾಡದೆ ಅಧ್ಯಕ್ಷ ರನ್ನು ನೇಮಕ ಮಾಡಬೇಕು. ವಿಧಾನಸಭೆ ಶಾಸಕಾಂಗ ಪಕ್ಷ ಹಾಗೂ ವಿರೋಧ ಪಕ್ಷದ ನಾಯಕನ ನೇಮಕದ ಬಗ್ಗೆ ಯಾವನಾಯಕರೂ ಬಹಿರಂಗ ಹೇಳಿಕೆ ನೀಡುವಂತಾಗಬಾರದು’ ಎಂದರು.
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಕ್ಷದ ಚಟುವಟಿ ಕೆಗಳಿಂದ ಅವರು ದೂರವಿದ್ದರು. ಆದರೆ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ, ಪ್ರಮುಖ ನಾಯಕರ ಜತೆಗೆ ಸಭೆ ನಡೆಸಿ ಚರ್ಚಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ‘ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಗೊಂದಲ ಮುಂದುವರಿದಿದ್ದು, ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ನೆರೆ, ಬರಪೀಡಿತ ಪ್ರದೇಶಗಳ ಜನರ ಸಮಸ್ಯೆ ಕೇಳುವವರೇ ಇಲ್ಲವಾಗಿದ್ದಾರೆ’ ಎಂದು ಆರೋಪಿಸಿದರು.