ಬೆಂಗಳೂರು: ಕಳೆದ 3 ವರ್ಷಗಳಿಂದ ನನೆಗುದಿಯಲ್ಲಿರುವಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಲೋಕಸಭಾ ಚುನಾವಣೆ ಮುಗಿದ ಬಳಿಕವೇ ನಡೆಯಲಿದೆ.
ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ವಿಧಾನಮಂಡಲದ ಅಧಿವೇಶನದಲ್ಲಿ ಅನುಮೋದನೆಗೊಂಡ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಬೇಕಿದ್ದು, ಅವರು ಸಹಿ ಮಾಡಿ ಕಳುಹಿಸಿದ ತಕ್ಷಣವೇ ಅಧಿಸೂಚನೆ ಹೊರಡಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಈ ಮಧ್ಯೆ ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಮತ್ತು 20ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವುದರಿಂದ ಪರೀಕ್ಷೆ ಮಧ್ಯೆ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲು ಸಾಧ್ಯವಿಲ್ಲ. ಈ ಪರೀಕ್ಷೆಗಳನ್ನು ಯಾವುದೇ ಗೊಂದಲ ಇಲ್ಲದೇ ಯಶ್ವಸಿಯಾಗಿ ಪೂರ್ಣಗೊಳಿಸುವುದು ಪ್ರಥಮ ಆದ್ಯತೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದರು.