ಹುಬ್ಬಳ್ಳಿ: ಶಿರಸಿಯಲ್ಲಿ ಗುರುವಾರ ನಡೆದ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಘಟಕದ ವಿಶೇಷ ಕಾರ್ಯಕಾರಿಣಿಯಲ್ಲಿ ಪರಿಶಿಷ್ಟ ಜಾತಿ ಮೋರ್ಚಾದ ಪದಾಧಿಕಾರಿಗಳು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಎಸ್.ಸಿ ಮೋರ್ಚಾದ ವಿವಿಧ ತಾಲ್ಲೂಕುಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರವೇ ಡಾ.ಬಿ.ಆರ್.ಅಂಬೇಡ್ಕರ್ ವಿಚಾರಗಳಿಗೆ ವಿಶೇಷ ಮಹತ್ವ ದೊರೆತಿದೆ’ ಎಂದು ಅರುಣಕುಮಾರ್ ಅವರು ಹೇಳಿದಾಗ, ಎದ್ದುನಿಂತ ಇಬ್ಬರು ಕಾರ್ಯಕರ್ತರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
‘ನೀವು ಹೀಗೆ ಹೇಳುತ್ತೀರಿ. ಕೇಂದ್ರ ಸಚಿವರು ಸಂವಿಧಾನ ಬದಲಿಸುವ ಮಾತನಾಡಿದ್ದಾರೆ. ಇದರಿಂದಾಗಿ ಪಕ್ಷಕ್ಕೆ ಹಾನಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಿದರೆ, ಮತ ಕೇಳಲು ಹೋಗಲು ಕಷ್ಟವಾಗುತ್ತದೆ’ ಎಂದು ಹೇಳಿದ್ದಾಗಿ ಸಭೆಯಲ್ಲಿದ್ದ ಕಾರ್ಯಕರ್ತರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.