ಬೆಂಗಳೂರು: ‘ಬೀಜ, ಗೊಬ್ಬರದ ವಿಚಾರದಲ್ಲಿ ರೈತರಿಗೆ ಮೋಸ ಮಾಡಿದರೆ ಸರ್ಕಾರ ಸುಮ್ಮನಿರುವುದಿಲ್ಲ. ಅಂಗಡಿಗಳಲ್ಲಿ ಗೊಬ್ಬರದ ಬೆಲೆ ಪ್ರದರ್ಶಿಸುವ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
‘ಪ್ರಜಾವಾಣಿ’ ಕಚೇರಿಯಲ್ಲಿ ಬುಧವಾರ ಫೋನ್ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಿಗದಿತ ದರಕ್ಕಿಂತ ಅಧಿಕ ದರದಲ್ಲಿ ಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
‘ಆಲಿಕಲ್ಲು ಮಳೆ, ಬಿರುಗಾಳಿಯಂತಹ ನೈಸರ್ಗಿಕ ವಿಕೋಪ ಸಂಭವಿಸಿ ಬೆಳೆ ಹಾನಿಯಾದರೆ ತಕ್ಷಣ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲಾಗುವುದು. ಈಚೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಂಭವಿಸಿದ ಹಾನಿಗೆ ಸರ್ಕಾರ ಈಗಾಗಲೇ ₹ 45 ಕೋಟಿ ಬಿಡುಗಡೆ ಮಾಡಿದೆ’ ಎಂದರು.