ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ಒಳಗೊಂಡ ಕೋವಿಡ್–19 ಕಾರ್ಯಪಡೆಯು ಚಿಕಿತ್ಸಾ ವೆಚ್ಚದ ಬಗ್ಗೆ ಚರ್ಚಿಸಿ, ಅಂತಿಮ ನಿರ್ಧಾರಕ್ಕೆ ಬಂದಿದೆ. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಖಾಸಗಿ ಆಸ್ಪತ್ರೆಗಳು ಕೂಡಾ ಸೋಂಕಿತರಿಗೆ ನಿಗದಿತ ದರದಲ್ಲಿ ಚಿಕಿತ್ಸೆ ನೀಡಬಹುದಾಗಿದೆ. ಕೆಲ ದಿನಗಳ ಹಿಂದಷ್ಟೆ ಚಿಕಿತ್ಸೆ ಸಂಬಂಧ ಖಾಸಗಿ ಆಸ್ಪತ್ರೆಗಳು ಶುಲ್ಕಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದವು. ಕರ್ನಾಟಕ ಆರೋಗ್ಯ ಕಾಳಜಿ ಸಂಘಟನೆಗಳ ಒಕ್ಕೂಟದ (ಎಫ್ಎಚ್ಎಕೆ) ಪ್ರತಿನಿಧಿ ಸೇರಿ 8 ಮಂದಿ ಸದಸ್ಯರ ದರ ನಿಗದಿ ಸಮಿತಿ, ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕುಟುಂಬದ ರೋಗಿಗಳಿಗೆ ಕ್ರಮವಾಗಿ ಸಾಮಾನ್ಯ ವಾರ್ಡ್ಗೆ ₹ 5,200, ಆಮ್ಲಜನಕ ಸಹಿತ ವಾರ್ಡ್ಗೆ ₹ 7,000, ತೀವ್ರ ನಿಗಾ ಘಟಕಕ್ಕೆ ₹ 8,500 ಹಾಗೂವೆಂಟಿಲೇಟರ್ ಸಹಿತ ಐಸಿಯುವಿಗೆ ₹ 10,000 ಶುಲ್ಕಕ್ಕೆ ಬೆಂಬಲ ವ್ಯಕ್ತಪಡಿಸಿತ್ತು. ಆದರೆ, ಸಾಮಾನ್ಯ ರೋಗಿ ಗಳಿಗೆ ಪ್ರಸ್ತಾಪಿಸಿದ ಶುಲ್ಕದಲ್ಲಿ ಶೇ 20ರಷ್ಟು ಕಡಿತ ಮಾಡುವಂತೆ ಸೂಚಿಸಿತ್ತು. ಶುಲ್ಕ ಇಳಿಕೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.