ಧಾರವಾಡ: ‘ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೊಸದಾಗಿ 100 ಹಾಸಿಗೆಗಳ ಮಹಿಳಾ ಮತ್ತು ಮಕ್ಕಳ ವಿಭಾಗದ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಸರ್ಕಾರ ₹26 ಕೋಟಿ ಬಿಡುಗಡೆ ಮಾಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆ ಸಾಮರ್ಥ್ಯದ ಕಟ್ಟಡಕ್ಕೆ ಶಿಲಾನ್ಯಾಸ ಹಾಗೂ ಸಿಟಿ ಸ್ಕ್ಯಾನ್ ಘಟಕವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಶ್ಯವಿರುವ ಎಲ್ಲಾ ಅಗತ್ಯ ಸೌಕರ್ಯ ಒದಗಿಸಲಾಗಿದೆ. ನಾಲ್ಕು ಡಯಾಲಿಸಿಸ್ ಯಂತ್ರಗಳು ಕಾರ್ಯ ನಿರ್ವಹಿಸುತ್ತಿವೆ. ಮಾರ್ಚ್ ಅಂತ್ಯದೊಳಗೆ 6 ಯಂತ್ರಗಳು ಸಾರ್ವಜನಿಕ ಸೇವೆಗೆ ಲಭ್ಯ’ ಎಂದರು.
‘ಹಳೆಯ ಶಸ್ತ್ರ ಚಿಕಿತ್ಸಾ ಕೊಠಡಿಗಳನ್ನು ನವೀಕರಿಸಲಾಗುತ್ತಿದೆ. ಏಕಕಾಲಕ್ಕೆ ಬೇರೆ, ಬೇರೆ ವಿಭಾಗದ ಶಸ್ತ್ರಚಿಕಿತ್ಸೆಗಳು ನಡೆಯಲು ಅನುಕೂಲವಾ
ಗುವಂತೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ವೃದ್ಧರ ವಾರ್ಡ್, ಮಹಿಳೆ ಮತ್ತು ಮಕ್ಕಳ ಸಾಂತ್ವನ ಕೇಂದ್ರ ಮಂಜೂರಾಗಿದೆ’ ಎಂದರು. ‘ಹೊಸಪೇಟೆಯ ಜಿಂದಾಲ್ ಸ್ಟೀಲ್ ವರ್ಕ್ಸ್ನ ಸಿಎಸ್ಆರ್ ಅನುದಾನದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ರಕ್ತ ವಿಧಳನ ಘಟಕ ಮಾರ್ಚ್ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ. ಇಸ್ರೊ ಅನುದಾನದಲ್ಲಿ ₹30 ಲಕ್ಷ ವೆಚ್ಚದಲ್ಲಿ ಆಸ್ಪತ್ರೆ ಆವರಣದಲ್ಲಿ ಸುಲಭ ಶೌಚಾಲಯ ನಿರ್ಮಿಸಲಾಗುವುದು’ ಎಂದು ವಿನಯ ಕುಲಕರ್ಣಿ ತಿಳಿಸಿದರು.
‘ರಿಯಾಯ್ತಿ ದರದಲ್ಲಿ ರೋಗಿಗಳ ಸಂಬಂಧಿಕರಿಗೆ ಕ್ಯಾಂಟೀನ್ನಲ್ಲಿ ತಿಂಡಿ ವ್ಯವಸ್ಥೆ ಇದೆ. ಹಾಪ್ಕಾಮ್ಸ್ ವತಿಯಿಂದ ಹಣ್ಣಿನ ಮಳಿಗೆ ಹಾಗೂ ಹಾಲು ಮಾರಾಟ ಕೇಂದ್ರ ತೆರೆಯಲಾಗಿದೆ’ ಎಂದರು.
‘ಕಳೆದ ಸಾಲಿನಿಂದ ಏಳು ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲಾಗಿದೆ. ಈಗಾಗಲೇ 2 ವಿಷಯಗಳಿಗೆ ಡಿಎನ್ಬಿ ಮಾನ್ಯತೆ ದೊರೆತಿದೆ. ಉಳಿದ ವಿಷಯಗಳಿಗೂ ಮಾನ್ಯತೆ ಸಿಗಬೇಕಿದೆ’ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಗಿರಿಧರ ಕುಕನೂರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಆರ್.ಎಂ.ದೊಡ್ಡಮನಿ ಇದ್ದರು.
**
ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಆಸ್ಪತ್ರೆ ಆವರಣ ಹಸಿರಿನಿಂದ ಕಂಗೊಳಿ<br/>ಸುವಂತೆ ಮಾಡಲು ₹30ಲಕ್ಷ ವೆಚ್ಚದಲ್ಲಿ ಉದ್ಯಾನ ನಿರ್ಮಿಸಲಾಗುವುದು.
– ವಿನಯ ಕುಲಕರ್ಣಿ, ಜಿಲ್ಲಾ ಉಸ್ತುವಾರಿ ಸಚಿವ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.