ಕೆರೆಗಳ ಒತ್ತುವರಿ ತೆರವು ಮತ್ತೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.
ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಭಾವಿಗಳ ವಿರುದ್ಧವೂ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ’ ಎಂದರು.
‘ರಾಜ್ಯದಲ್ಲಿ 36 ಸಾವಿರ ಕೆರೆಗಳಿದ್ದು, 6 ಸಾವಿರ ಕೆರೆಗಳು ಮೂಲಸ್ವರೂಪ ಕಳೆದುಕೊಂಡಿವೆ. ಕೆರೆ ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆಗೆ ಮಾರ್ಚ್ನಲ್ಲಿ ತಿದ್ದುಪಡಿ ತರಲಾಗಿದ್ದು, 30 ಸಾವಿರ ಕೆರೆಗಳು ಇಲಾಖೆಯ ವ್ಯಾಪ್ತಿಗೆ ಬಂದಿವೆ. ಇವುಗಳ ಒತ್ತುವರಿ ತೆರವು ಮಾಡಿ ಅಭಿವೃದ್ಧಿ ಮಾಡಲಾಗುತ್ತದೆ. ಇದಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಅನುದಾನ ಬಳಸಿಕೊಳ್ಳಲಾಗುತ್ತದೆ’ ಎಂದು ಹೇಳಿದರು.
‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಯಶ್ ಫೌಂಡೇಷನ್ ಸಹಭಾಗಿತ್ವದಲ್ಲಿ 'ಕೆರೆ ಸಂಜೀವಿನಿ ಯೋಜನೆ'ಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಈ ವರ್ಷ ಇದಕ್ಕೆ ₹100 ಕೋಟಿ ವೆಚ್ಚ ಮಾಡಲಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು 100 ಕೆರೆಗಳ ಹೂಳೆತ್ತಲು ಸಹಕಾರ ನೀಡಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೂಳೆತ್ತಲು ಯಶ್ ಫೌಂಡೇಷನ್ ಸಹಕಾರ ನೀಡಲಿದೆ’ ಎಂದು ಹೇಳಿದರು.
‘ಕೆರೆಯಿಂದ ಕೆರೆಗೆ ನೀರು ತುಂಬಿಸುವ ಯೋಜನೆಗೆ ಕ್ರಿಯಾಯೋಜನೆ ಸಿದ್ಧಪಡಿಸಲಾಗುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಗೆ ₹200 ಕೋಟಿ ಮೀಸಲಿಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಸಹಕಾರದಲ್ಲಿ ಈ ಯೋಜನೆ ಅನುಷ್ಠಾನ ಮಾಡಲಾಗುತ್ತದೆ’ ಎಂದು ಹೇಳಿದರು.
‘ಕೆಆರ್ಎಸ್ನಿಂದ ಕೆಲವು ದಿನ ಒಂದು ಲಕ್ಷ ಕ್ಯೂಸೆಕ್ ನೀರು ಹೊರಹೋಗಿದೆ. ಅಷ್ಟೂ ನೀರನ್ನು ನಾಲೆಗಳಿಗೆ ಬಿಡಲು ಸಾಧ್ಯವಿಲ್ಲ. ನಾಲೆಗಳಿಗೆ 3,600 ಕ್ಯೂಸೆಕ್ ನೀರನ್ನು ಬಿಡಬಹುದು. ಅದರಲ್ಲಿ ಶೇ 60ರಷ್ಟು ನೀರನ್ನು ಕೆರೆಗಳಿಗೆ, ಶೇ 25ರಷ್ಟನ್ನು ನಾಟಿಗೆ ಹಾಗೂ ಶೇ 15ರಷ್ಟನ್ನು ಬೆಳೆಗೆ ಬಿಡಲಾಗುತ್ತಿದೆ. ಹಂತ ಹಂತವಾಗಿ ಕೆರೆಗಳನ್ನು ತುಂಬಿಸಲಾಗುತ್ತಿದೆ. ಡಿಸೆಂಬರ್ ಒಳಗೆ ಎಲ್ಲ ಕೆರೆಗಳನ್ನು ತುಂಬಿಸಲಾಗುತ್ತದೆ’ ಎಂದರು.
ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನಕ್ಕೆ ₹300 ಕೋಟಿ ಮೀಸಲಿಡಲಾಗಿದೆ.
–ಸಿ.ಎಸ್.ಪುಟ್ಟರಾಜು, ಸಣ್ಣ ನೀರಾವರಿ ಸಚಿವ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.